ಬೆಂಗಳೂರು:
ರಾಜ್ಯದ ಮೈತ್ರಿ ಸರ್ಕಾರ ರೈತ ಸಮುದಾಯಕ್ಕೆ ನೀಡಿರುವ ಕಾರ್ಯಕ್ರಮಗಳನ್ನು ಸಹಿಸಲಾಗದೆ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟೀಕಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರು ಈ ವಿಷಯ ತಿಳಿಸಿದರು.
ಮಾಜಿ ಪ್ರಧಾನಿ ಇಂದಿರಾಗಾಂಧಿ, ಹಸಿರು ಕ್ರಾಂತಿ ಮೂಲಕ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಮಹತ್ವದ ಕೊಡುಗೆ ನೀಡಿದ್ದರೂ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡವರು ಖಾತೆ ತೆರೆದು ಬ್ಯಾಂಕಿನ ಸೌಲಭ್ಯ ಪಡೆಯುವಂತಹ ಅವಕಾಶ ಮಾಡಿಕೊಟ್ಟಿದ್ದರು ಎಂದು ಅವರು ಹೇಳಿದರು.
ರಾಜಕೀಯ ಇತಿಹಾಸದಲ್ಲಿ ಸ್ಮರಿಸಿಕೊಳ್ಳುವ ಕೆಲವರ ಪೈಕಿ ಇಂದಿರಾ ಗಾಂಧಿ ಅವರು ಒಬ್ಬರು. ಅಧಿಕಾರ ನಡೆಸಿದ್ದರೂ ಕೆಲವರೂ ತಮ್ಮ ಛಾಪು ಮೂಡಿಸಿಲ್ಲ. ಆದರೆ ಇಂದಿರಾ ಗಾಂಧಿ ಅವರು ತಮ್ಮ ಅಧಿಕಾರದ ಮೂಲಕ ರಾಜಕೀಯ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದರು.
ಆದರೆ ಬಿಜೆಪಿ ಈ ಸಮಾಜಕ್ಕೆ ಯಾವ ಕೊಡುಗೆಯನ್ನೂ ಕೊಟ್ಟಿಲ್ಲ. ಬದಲಿಗೆ ಕಾಂಗ್ರೆಸ್ ಕೊಟ್ಟ ಯೋಜನೆಯನ್ನು ಮರೆಸುವ, ಇತಿಹಾಸ ಮರೆಮಾಚುವ ಕೆಲಸವನ್ನು ಬಿಜೆಪಿ ಅವರು ಮಾಡುತ್ತಿದ್ದಾರೆ.
ಕಾಂಗ್ರೆಸ್ ಸದಾ ರೈತರ ಪರ ಸೈದ್ಧಾಂತಿಕವಾಗಿ ನಿಂತಿದೆ. ಕೇಂದ್ರ ಸರಕಾರ ನಾಲ್ಕೂವರೆ ವರ್ಷದಲ್ಲಿ ರೈತರ ಪರ ಯಾವ ಯೋಜನೆಯನ್ನು ನೀಡಿಲ್ಲ. ಹೀಗಾಗಿ ಮುಂದಿನ ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಪ್ರಜಾಪ್ರಭುತ್ವ ಉಳಿಸುವ ಕೆಲಸವನ್ನು ಕಾಂಗ್ರೆಸ್ನಿಂದ ಮಾತ್ರ ಮಾಡಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/11/rrrrrrrrrrrrrrrrrrrrraaaaaa.gif)