ದಾವಣಗೆರೆ:
ವಿದ್ಯಾರ್ಥಿಗಳು ಇಷ್ಟ ಪಟ್ಟು ಓದಿ, ಓದಿದ್ದನ್ನು ಸರಿಯಾಗಿ ಗ್ರಹಿಸಿಕೊಂಡರೆ ಪರೀಕ್ಷೆ ಕಷ್ಟ ಎನಿಸುವುದಿಲ್ಲ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀಓಂಕಾರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಹದಡಿ ರಸ್ತೆಯಲ್ಲಿರುವ ಅಮೃತಾ ಸಭಾಭವನದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ವಲಯ ಹಾಗೂ ಎಂಇಎಸ್ ಕಾನ್ವೆಂಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಪರೀಕ್ಷೆ ಒಂದು ಹಬ್ಬ ಬನ್ನಿ ಸಂಭ್ರಮಿಸೋಣ’ ಹಾಗೂ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಮುಂದೆ ಪರೀಕ್ಷೆ ಎದುರಿಸುವ ಗುರಿ ಇದೆ. ಗುರುವಿನ ಮಾರ್ಗದರ್ಶನದಲ್ಲಿ ಗುರಿಯನ್ನು ಮುಟ್ಟಬೇಕು. ವಿದ್ಯಾರ್ಥಿಗಳು ಏಕಾಗ್ರತೆ, ಶ್ರದ್ಧೆ, ಗ್ರಹಿಕೆ ಮತ್ತು ಪ್ರಾಮಾಣಿಕ ಪ್ರಯತ್ನದ ಮೂಲಕ ಇರುವ ಸಮಯವನ್ನು ಸದುಪಯೋಗ ಪಡೆದುಕೊಂಡು ಓದಿದರೆ ಗುರಿ ಮುಟ್ಟಲು ಸಾಧ್ಯವಾಗಲಿದೆ ಎಂದರು.
ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನುಗಬೇಕಾದರೆ, ಸಮಯ ಮತ್ತು ಶ್ರಮ ಈ ಎರಡನ್ನೂ ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದ ಶ್ರೀಗಳು, ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ತರಲು ಪಣ ತೊಡಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಿಗೆ ಕ್ಲಿಷ್ಟಕರವಾದ ವಿಷಯವನ್ನು ಸರಳೀಕರಿಸಿ ಹೆಳಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಈ ಕಾರ್ಯಾಗಾರದ ಮೂಲಕ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಸಂದರ್ಭದಲ್ಲಿ ಇರುವ ಭಯವನ್ನು ಹೋಗಲಾಡಿಸಲು ಚೈತನ್ಯ ಧೈರ್ಯ ತುಂಬುವ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಿರುವುದು ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಹಾಗೂ ದೈಹಿಕ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ಓದಿಗೆ ಹೆಚ್ಚು ಒತ್ತು ನೀಡಿ ಅದರ ಕಡೆಗೆ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಬೆಳಗಿನ ಜಾವ 4 ಗಂಟೆಯಿಂದ 7 ಗಂಟೆಯವರೆಗೂ ನಿರಂತರವಾಗಿ ಅಧ್ಯಯನ ಮಾಡಿದರೆ, ಓದಿದ್ದು ನೆನಪಿನಲ್ಲಿ ಉಳಿಯಲಿದೆ. ಆದ್ದರಿಂದ ವಿದ್ಯಾರ್ಥಿಗಳು ಆ ಸಮಯದಲ್ಲಿ ಅಭ್ಯಾಸ ಮಾಡಿದರೆ ಒಳ್ಳೆಯದು ಎಂದು ನುಡಿದರು.
ಎಂಇಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಹೆಚ್.ಕೆ.ನಿಂಗರಾಜು, ಬಿ.ಎಂ.ನಿರಂಜನಮೂರ್ತಿ, ಸೋಮಶೇಖರ್ಗೌಡ, ಕಿರಣ್ ಕುಮಾರ್ ಶಿಂಧೆ, ಮುರುಗೇಂದ್ರಯ್ಯ, ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
