ಕೆ.ಸಿ.ರಾಮಮೂರ್ತಿ ಬಿಜೆಪಿ ಸೇರ್ಪಡೆ

ನವದೆಹಲಿ

    ಕಳೆದ ವಾರವಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಕೆ.ಸಿ.ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.ನಿನ್ನೆಗೆ ನಿಗದಿಯಾಗಿದ್ದ ಕೆ.ಸಿ.ರಾಮಮೂರ್ತಿಯವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಕಾರಣಾಂತರಗಳಿಂದ ರದ್ದುಗೊಂಡು ಇಂದಿಗೆ ನಿಗದಿಯಾಗಿತ್ತು.

     ಅದರಂತೆ ಇಂದು ನವದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಮತ್ತಿತರರ ಸಮ್ಮುಖದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಕೆ.ಸಿ.ರಾಮಮೂರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

     ಇಂದು ನಡೆದ ಸರಳ ಸಮಾರಂಭದಲ್ಲಿ ಕಮಲದ ಬಾವುಟ ಹಾಗೂ ಕೇಸರಿ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಮುಖಂಡರಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.ಕಳೆದ ವಾರ ಇದ್ದಕ್ಕಿದ್ದಂತೆ ರಾಮಮೂರ್ತಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಸಭಾಪತಿಗಳೂ ಆಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.

    ಬಳಿಕ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ತಮ್ಮನ್ನು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡಿದ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದರು.ರಾಜೀನಾಮೆ ನೀಡಿದಾಗಲೇ ಅವರು ಬಿಜೆಪಿಗೆ ಸೇರಬಹುದೆಂಬ ಅನುಮಾನವಿತ್ತು. ಇದೀಗ ಅಧಿಕೃತವಾಗಿ ಅವರು ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಎಲ್ಲ ವದಂತಿಗಳಿಗೂ ತೆರೆ ಎಳೆದಂತಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap