ಕೆರೆಗಳಿಗೆ ನೀರು ತುಂಬಿಸಲು ಕಾರ್ಯಪ್ರವೃತರಾಗಿ

ದಾವಣಗೆರೆ:

      ಈ ಬಾರಿಯಾದರೂ 22 ಕೆರೆಗಳ ಏತ ನೀರಾವರಿ ಯೋಜನೆ ವ್ಯಾಪ್ತಿಯ, ಕೆರೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತರಾಗಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ ತಾಕೀತು ಮಾಡಿದರು.

      ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಕುರಿತು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, 22 ಕೆರೆಗಳ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಬೇಜವಾಬ್ದಾರಿತನದಿಂದ ಇಲ್ಲಿಯ ವರೆಗೂ, ಈ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

       ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಹೊಳೆಗೂ ಯಾವ ಕ್ಷಣದಲ್ಲಿ ಬೇಕಾದರೂ ನೀರು ಬರುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು, ಈ ಕಾಮಗಾರಿಯ ಪೈಪ್‍ಲೈನ್‍ನಲ್ಲಿ ಆಗಿರುವ ಲೋಪದೋಷ ಸೇರಿದಂತೆ ಎಲ್ಲಾ ರೀತಿಯ ಅಡೆತಡೆಗಳನ್ನು ಸರಿಪಡಿಸಿಕೊಂಡು, ಈ ಮಳೆಗಾಲದಲ್ಲಾದರೂ ಕೆರೆಗೆಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಬೇಕೇಂದು ಸೂಚಿಸಿದರು.

       22 ಕೆರೆಗಳ ಏತ ನೀರಾವರಿ ಯೋಜನೆಯ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಯದ ಕಾರಣ, ಹಳ್ಳಿಗಳಿಗೆ ಹೋದಾಗ ಜನರು ನಮ್ಮನ್ನು ಪ್ರಶ್ನಿಸುತ್ತಾರೆ. ಕಳೆದ ಎಂಟು ವರ್ಷಗಳಿಂದಲೂ ಅಧಿಕಾರಿಗಳ ಬೇಜವಾಬ್ದಾರಿ ತನದಿಂದ ನದಿಯಲ್ಲಿ ನೀರು ಹರಿದುಹೋದರೂ ಕೆರೆಗಳಿಗೆ ತುಂಬಲಾಗಲಿಲ್ಲ. ಈ ಬಾರಿ ಹಾಗಾಗದಂತೆ ಕ್ರಮ ವಹಿಸಬೇಕೆಂದು ಹೇಳಿದರು.

       ಇದಕ್ಕೆ ಪ್ರತಿಕ್ರಯಿಸಿದ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಯತೀಶ್ಚಂದ್ರ, ಈಗಾಗಲೇ ರಾಜನಹಳ್ಳಿ ಬಳಿ ನದಿಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಅಲ್ಲದೇ, ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಳಿಯಲ್ಲಿ ಮಿನಿ ಸ್ಟೋರೇಜ್ ಟ್ಯಾಂಕ್‍ನ ಕಾಮಗಾರಿ ಸಹ ನಡೆಯುತ್ತಿದೆ. ಈ ಕಾಮಗಾರಿಗಳು ಮುಂದಿನ ಒಂದು ವಾರದಲ್ಲಿಯೇ ಪೂರ್ಣಗೊಳ್ಳಲಿದೆ. ಬಳಿಕ ನದಿಯಲ್ಲಿ ಬಂದಾಕ್ಷಣವೇ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು.

       ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಮುಂದಿನ ಆರು ತಿಂಗಳಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮುಗಿಸಬೇಕು. ಈ ಕಾಮಗಾರಿ ಮುಕ್ತಾಯವಾದರೆ, 121 ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ, ಆ ಕೆರೆಗಳ ನೆರೆಹೊರೆಯ ಗ್ರಾಮಗಳ ಜನರ ನೀರಿನ ಬವಣೆ ನೀಗಲಿದೆ ಎಂದರು.

       ಇದಕ್ಕೆ ಅಸಹಾಯಕತೆ ವ್ಯಕ್ತಪಡಿಸಿದ ಗುತ್ತಿಗೆದಾರ ರಾಹುಲ್‍ಸಿಂಗ್ ಮಾತನಾಡಿ, ಇನ್ನೂ ಪೈಪ್‍ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಅಲ್ಲದೇ, ಇಲ್ಲಿ ಸಾಕಷ್ಟು ಅಡೆತಡೆಗಳಿವೆ. ಆದ್ದರಿಂದ 2020ರ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಸಲಾಗುವುದು ಎಂದು ಮಾಹಿತಿ ನೀಡಿದರು.

      ಲೋಕಸಭಾ ಸದಸ್ಯ ಸಿದ್ದೇಶ್ವರ ಮಾತನಾಡಿ, ಹರಪನಹಳ್ಳಿ, ಹರಿಹರ, ಜಗಳೂರು ಮತ್ತು ಹೊನ್ನಾಳಿ ತಾಲೂಕುಗಳಲ್ಲಿ ನಡೆಯುತ್ತಿರುವ ಕೆರೆಗಳಿಗೆ ನೀರು ಹರಿಸುವ ಯೋಜನೆಗಳ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಭಿಯಂತರ ರವಿ ಮಾತನಾಡಿ, ದಾವಣಗೆರೆ ನಗರಕ್ಕೆ ದಿನದ 24 ಗಂಟೆಗಳ ಕಾಲ ನೀರು ಸರಬರಾಜು ಮಾಡುವ ‘ಜಲಸಿರಿ’ ಯೋಜನೆಯಡಿ ಮುಂದಿನ 6 ತಿಂಗಳಲ್ಲಿ ಮೊದಲ ಹಂತದಲ್ಲಿ ಕರೂರು, ಬಸಾಪುರ ಮತ್ತು ಯರಗುಂಟೆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದು. ಯೋಜನೆಯಡಿ ಹೊಸದಾಗಿ 19 ಓವರ್‍ಹೆಡ್ ಟ್ಯಾಂಕ್‍ಗಳ ನಿರ್ಮಾಣಮಾಡುವುದು ಮತ್ತು 30 ಹಳೆಯ ಟ್ಯಾಂಕ್‍ಗಳ ನವೀಕರಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

       ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ವಾಗೀಶಸ್ವಾಮಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link