ಬಳ್ಳಾರಿ
ಪ್ರತಿಯೊಬ್ಬ ವ್ಯಕ್ತಿಯು ವೈಯಕ್ತಿಕ ಶುಚಿತ್ವಕ್ಕೆ ಒತ್ತು ನೀಡುವ ಜೊತೆಗೆ ಮಕ್ಕಳ ಆರೋಗ್ಯದ ಕಾಳಜಿಯನ್ನು ತಪ್ಪದೇ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಾಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೇ.10ರಷ್ಟು 5 ವರ್ಷದೊಳಗಿನ ಮಕ್ಕಳು ಅತಿಸಾರ ಭೇದಿಯಿಂದ ಮರಣ ಹೊಂದುತ್ತಾರೆ. ಆದರೆ, ಅತಿಸಾರ ಭೇದಿಯನ್ನು ಬಹು ಸುಲಭವಾಗಿ ನಿಯಂತ್ರಿಸಿ ಮರಣವನ್ನು ತಡೆಗಟ್ಟಬಹುದಾಗಿದ್ದು, ರಾಜ್ಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು 2014-15ನೇ ಸಾಲಿನಿಂದ ತೀವ್ರತರ ಅತಿಸಾರ ಭೇದಿಯಿಂದ ಶೂನ್ಯ ಮಕ್ಕಳ ಮರಣ ಎಂಬ ದ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿರುತ್ತದೆ.
ಪ್ರಸ್ತುತ 2019-20ನೇ ಸಾಲಿನಲ್ಲಿ ಜೂ.3 ರಿಂದ 17ರವರೆಗೆ ಜಿಲ್ಲೆಯಾದ್ಯಾಂತ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಈ ಪಾಕ್ಷಿಕವನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವರಾಜ ಹೆಡೆ ಅವರು ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದೊಳಗಿನ 304124 ಮಕ್ಕಳ ಪಾಲಕರಿಗೆ ಅತಿಸಾರಭೇದಿ ನಿಯಂತ್ರಣ ಕುರಿತು ಜಾಗೃತಿಯನ್ನು 2039 ಆಶಾ ಕಾರ್ಯಕರ್ತೆಯರು 2704 ಅಂಗನವಾಡಿ ಕಾರ್ಯಕರ್ತೆಯರು ಮನೆ ಬೇಟಿ ಮೂಲಕ ಮತ್ತು ಜಿಲ್ಲೆಯ ಎಲ್ಲ 463 ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಜಿಂಕ್-ಓಆರ್ಎಸ್ ಕಾರ್ನರಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ 3339 ಸರ್ಕಾರಿ ಅನುದಾನಿತ ಮತ್ತು ವಸತಿ, ಶಾಲೆಗಳಲ್ಲಿ ಸಹ ಅತಿಸಾರಭೇದಿ ನಿಯಂತ್ರಣ ಹಾಗೂ ಕೈ ತೊಳೆಯುವ ವಿಧಾನಗಳ ಕುರಿತು ಆರೋಗ್ಯ ಕಾರ್ಯಕರ್ತರಿಂದ ಪಾಕ್ಷಿಕ ನಡೆಸಲಾಗುತ್ತದೆ ಎಂದರು.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ರವೀಂದ್ರನಾಥ್ ಪ್ರಾಸ್ತವಿಕವಾಗಿ ಮಾತನಾಡಿದರು, ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಸ್ಥಾನೀಕ ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ, ಮಕ್ಕಳ ತಜ್ಞರಾದ ಡಾ.ವೀರಶಂಕರ ಹಿರಿಯ ಡಾ.ಬಾಲು ವೆಂಕಟೇಶ, ತಾಲ್ಲೂಕ ಆರೋಗ್ಯ ಅಧಿಕಾರಿ ಡಾ ಕೆ.ಜಿ ವಿರೇಂದ್ರ ಕುಮಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಸೇರಿದಂತೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
