ಹೊಸಪೇಟೆ:
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದರೂ ದುರ್ಬಲಗೊಳಿಸಲು ಬಿಜೆಪಿ ಕೈಹಾಕುವ ಮೂಲಕ ಅಸ್ಥಿರಮಾಡಲು ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ದೂರಿದರು.
ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯದಲ್ಲಿ ಯಾರೊಬ್ಬರಿಗೂ ಮತದಾರರು ಸ್ಪಷ್ಟ ಬಹುಮತ ನೀಡಿಲ್ಲಿ.
ಆದರೆ ಕೋಮುವಾದಿ ಪಕ್ಷವನ್ನು ದೂರವಿಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಜನರ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸಮ್ಮಿಶ್ರ ಸರಕಾರ ರಚಿಸಿ ಉತ್ತಮ ಆಡಳಿತ ನೀಡಲಾಗುತ್ತಿದೆ. ಇದನ್ನು ಸಹಿಸದ ಕೋಮುವಾದಿ ಬಿಜೆಪಿ ಪಕ್ಷ ಅಸ್ಥಿರ ಮಾಡಲು ಮುಂದಾಗಿದೆ. ಇದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನರು ತಕ್ಕ ಪಾಠಕಲಿಸಲಿದ್ದಾರೆ ಎಂದು ಕಿಡಿಕಾರಿದರು.
ಮಹಿಳೆಯರಿಗೆ ಸಮಾನವಾದ ಹಕ್ಕು ದೊರೆಯಬೇಕು. ಅವರಿಗೂ ರಾಜಕೀಯದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚಾರ ಕೈಗೊಂಡಿರುವೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರು ಸ್ಪರ್ಧಿಸಲಿದ್ದಾರೆ. ಪಕ್ಷದ ಜೊತೆಗೆ ಸಮಾಜದ ಒಳಿತಿಗಾಗಿ ಮಹಿಳೆಯರು ಶ್ರಮಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಮುನ್ನ ರಾಜ್ಯಾದ್ಯಂತ ಶೇ.33 ರಷ್ಟು ಮೀಸಲು ನೀಡಲು ಒತ್ತಾಯಿಸಿ ಬೃಹತ್ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಶ್ರಮಿಸಿದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲು ಪ್ರಾಮಾಣಿಕ ಪ್ರಯತ್ನಿಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಯಾರೊಬ್ಬರೂ ಪಕ್ಷ ಬಿಟ್ಟುಹೋಗುವುದಿಲ್ಲ. ಎಲ್ಲ ಪಕ್ಷದ ಶಾಸಕರು ಒಗ್ಗಟ್ಟಾಗಿದ್ದಾರೆ. ಚಿಕ್ಕಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುವುದು. ಸರಕಾರ ಸುಭದ್ರವಾಗಿ ಐದು ವರ್ಷ ನಡೆಯಲಿದೆ ಎಂದರು. ಹೊಸಪೇಟೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಂ. ರಫಿಕ್ ಕಮಲಾಪುರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಮಾಜಿ ಹೇಮಣ್ಣ, ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಮುನ್ನಿ ಖಾಸಿಂ, ಭಾಗ್ಯಲಕ್ಷ್ಮೀ ಭರಾಡೆ, ಕವಿತಾ ಈಶ್ವರ ಸಿಂಗ್, ಕೆಪಿಸಿಸಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷೆ ಮಹಿಳಾ ಆಶಾಲತಾ ಸೋಮಪ್ಪ ಹಾಗೂ ನಿಂಬಗಲ್ ರಾಮಕೃಷ್ಣ ಇನ್ನಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
