ದೆಹಲಿಗೆ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು:

      ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಹಲವು ಗೊಂದಲಗಳು ಇರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿಯೂ ಗೊಂದಲಗಳಿವೆ. ಇತ್ತೀಚೆಗೆ ಕಾಂಗ್ರೆಸ್ ಪಾಳೆಯದಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಕರ್ನಾಟಕದ ರಾಜಕೀಯವೇ ಹೆಚ್ಚು ಚರ್ಚೆಗೆ ಒಳಗಾಗುತ್ತಿದೆ.

       ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕರೆಸಿಕೊಂಡಿದೆ. ಇದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಮುಖಂಡರಾಗಿಯೂ ಹೊರಹೊಮ್ಮಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರ ಸೋಲನ್ನು ಯಾರೂ ಊಹಿಸಿರಲಿಲ್ಲ. ಚುನಾವಣೆಯ ನಂತರ ಅವರು ಏನೆಲ್ಲಾ ಹುದ್ದೆಗಳನ್ನು ಅಲಂಕರಿಸಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿದ್ದವು. ಆದರೆ ಅಂದುಕೊಂಡದ್ದೇ ಬೇರೆ, ಆದದ್ದೇ ಬೇರೆ.

       ಸೋಲನ್ನು ಸವಾಲಾಗಿ ಸ್ವೀಕರಿಸಲಾಗಿದೆ. ಪಕ್ಷ ಸಂಘಟಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲ ಕಡೆಯೂ ಹೀನಾಯವಾಗಿ ಸೋತ ನಂತರ ಅನಿವಾರ್ಯವಾಗಿ ತಮ್ಮ ಸೋಲನ್ನು ಒಪ್ಪಿಕೊಂಡ ಏಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜಿನಾಮೆ ನೀಡಿದರು. ಇಂದಿಗೂ ತಮ್ಮ ರಾಜಿನಾಮೆಯನ್ನು ವಾಪಸ್ ಪಡೆದಿಲ್ಲ. ಅವರೇ ಮುಂದುವರೆಯಲಿ ಎಂಬ ಆಗ್ರಹಗಳು ಹೆಚ್ಚಿವೆ. ಈ ನಡುವೆ ರಾಹುಲ್ ಬಿಟ್ಟರೆ ಮತ್ತಾರು ಎಂಬ ಚರ್ಚೆಗಳು ಹೆಚ್ಚು ಮುನ್ನಲೆಗೆ ಬಂದಿವೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ಸಹ ಕೇಳಿಬರುತ್ತಿದೆ.

      ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಖರ್ಗೆ ಮುಂದುವರೆಯಲಿದ್ದಾರೆ ಎಂಬ ಮಾತುಗಳು ಒಂದು ಕಡೆಯಾದರೆ ಕರ್ನಾಟಕದಲ್ಲಿ ಖರ್ಗೆ ಮುಖ್ಯಮಂತ್ರಿಯಾಗಲಿ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿಯೇ ಕೆಲವೊಮ್ಮೆ ನುಸುಳಿಕೊಂಡು ಬರುತ್ತಿವೆ. ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಎಲ್ಲರಿಗೂ ಗೊತ್ತು. ಇಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ರಾಹುಲ್‍ಗಾಂಧಿ ಅವರತ್ತ ಸಮಸ್ಯೆಗಳ ಮೂಟೆಯನ್ನೇ ಹೊತ್ತು ಅವರ ತಲೆಯ ಮೇಲೆ ಹಾಕಿ ಬಂದಿದ್ದಾರೆ.

       ದೇವೇಗೌಡರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದ ನಂತರ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಹುಲ್ ಕರೆಸಿಕೊಂಡಿರುವುದು ತುಂಬಾ ಮಹತ್ವದ ಚರ್ಚೆಗಳು ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿವೆ.

      ರಾಜ್ಯ ಕಾಂಗ್ರೆಸ್ ನಾಯಕತ್ವದ ಪ್ರಶ್ನೆ ಒಂದು ಕಡೆಯಾದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬಹುದೆ ಎಂಬ ವದಂತಿಗಳು ಹರಿದಾಡುತ್ತಿವೆ. ಹಿಂದುಳಿದ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಕಟ್ಟಲು ರಾಹುಲ್ ಹೇಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ಸಹ ಕೇಳಿಬರುತ್ತಿರುವುದರಿಂದ ಸಹಜವಾಗಿಯೇ ಇಂತಹ ಚಿಂತನೆಗಳಿಗೆ ಎಡೆಮಾಡಿಕೊಟ್ಟಿದೆ.

      ಲೋಕಸಭಾ ಚುನಾವಣೆ ಬಳಿಕ ನಡೆಯಲಿರುವ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಎದುರಿಸುವ ಕಾರ್ಯತಂತ್ರ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೋರ್ ಕಮಿಟಿ ಸಭೆ ನಡೆದಿದೆ. 2019 ರಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಹುಲ್ ಅವರನ್ನೇ ಅಧ್ಯಕ್ಷ ಗಾಧಿಗೆ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ. ಒಂದು ವೇಳೆ ರಾಹುಲ್ ಒಪ್ಪದಿದ್ದರೆ ಮುಂದೇನು ಎಂಬ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಚರ್ಚೆಗೆ ಬರಲಿದೆ.

         1972 ರಿಂದ ಇಲ್ಲಿಯವರೆಗೆ 12 ಚುನಾವಣೆಗಳನ್ನು ಎದುರಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸತತ 9 ಬಾರಿ ವಿಧಾನಸಭೆಗೆ, ಎರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು. ಲೋಕಸಭೆಯಲ್ಲಿ ಪ್ರತಿಪಕ್ಷದ ಸ್ಥಾನದಲ್ಲಿದ್ದು, ಹಲವು ಬಾರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಶತಾಯಗತಾಯ ಅವರನ್ನು ಸೋಲಿಸಲೇಬೇಕೆಂಬ ಫರ್ಮಾನು ಬಿಜೆಪಿ ಹೈಕಮಾಂಡ್‍ನಿಂದ ರವಾನೆಯಾಗಿತ್ತಷ್ಟೇ ಅಲ್ಲ, ತಕ್ಕ ಕಾರ್ಯತಂತ್ರವನ್ನೂ ರೂಪಿಸಲಾಗಿತ್ತು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link