ಅಭ್ಯರ್ಥಿ ವಿಳಂಬವಾದರೂ ಗೆಲುವು ನಮ್ಮದೇ

ದಾವಣಗೆರೆ

     ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಅಭ್ಯರ್ಥಿ ಆಯ್ಕೆ ವಿಳಂಬವಾಗಿದ್ದರೂ, ಈ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಗೆಲುವು ನಮ್ಮದೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ ವಿಶ್ವಾಸ ವ್ಯಕ್ತಪಡಿಸಿದರು.

      ಈ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಇನ್ನೂ ಏ.4ರವರೆಗೆ ಕಾಲಾವಕಾಶವಿದೆ. ಯಾವುದೇ ಕ್ಷಣದಲ್ಲಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ. ಈ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ ಎಂದರು.

       ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಅಂದರೆ, ಏ.23ರಂದು ಮತದಾನ ನಡೆಯಲಿರುವ ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ಇನ್ನೂ ಘೋಷಣೆಯಾಗಿಲ್ಲ. ಈಗಾಗಲೇ ನಮ್ಮ ಪೈಲ್ವಾನರು ತಾಲೀಮು ನಡೆಸಿ ಕುಸ್ತಿಗೆ ಸಿದ್ಧರಾಗಿದ್ದು, ಅಖಾಡಕ್ಕೆ ಧುಮುಕುವುದೊಂದೇ ಬಾಕಿ ಎಂದು ಹೇಳಿದರು.

       ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿದೆ. ಅತಿದೊಡ್ಡ ಭ್ರಷ್ಟರು ಬಿಜೆಪಿಯಲ್ಲೇ ಇದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮೇಲೆ ಐಟಿ ಇಲಾಖೆ ದಾಳಿ ಮಾಡಲಿ ಎಂದು ಆಗ್ರಹಿಸಿದರು.

         ಕೇಂದ್ರ ಸರ್ಕಾರ ರೈತರ ಶೋಷಣೆ ನಡೆಸಿದೆ. ಫಸಲ್ ಭೀಮಾ ಯೋಜನೆಯಡಿ ಕಟ್ಟಿಸಿಕೊಂಡಿರುವ 20 ಸಾವಿರ ಕೋಟಿ ಪ್ರೀಮಿಯಂ ಪಾವತಿ ಹಣದ ಅರ್ಧದಷ್ಟು ಹಣ ಸಹ ರೈತರಿಗೆ ವಾಪಾಸು ನೀಡದೇ ರೈತರಿಗೆ ವಂಚನೆ ಮಾಡುವ ಮೂಲಕ ಕಂಪನಿಗಳಿಗೆ ಲಾಭ ಮಾಡಿಕೊಡಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ದೂರು ಸಹ ನೀಡಲಾಗಿದೆ ಎಂದರು.

       ಪ್ರಧಾನಿ ಮೋದಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ರೈತರ ಖಾತೆಗೆ 6 ಸಾವಿರ ರೂ ಹಾಕುವುದಾಗಿ ಹೇಳಿ, ಮೂಗಿಗೆ ತುಪ್ಪ ಸವರಿದ್ದಾರೆ. ಕಳೆದ ಚುನಾವಣೆಯಲ್ಲಿ ನೀಡಿದ್ದ ಯಾವುದೇ ಆಶ್ವಾಸನೆಯನ್ನು ಬಿಜೆಪಿ ಅಧಿಕಾರಕ್ಕೆ ಬಂದಾದ ನಂತರ ಈಡೇರಿಸಿಲ್ಲ. ಇವೆಲ್ಲವನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದರು.

      ಕಿಸಾನ್ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಹೆಚ್.ಆರ್.ಮನೋಜ್ ಮಾತನಾಡಿ, 2014ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಘೊಷಿಸಿದಂತೆ ಸ್ವಾಮಿನಾಥನ್ ವರದಿ ಜಾರಿಗೆ ಮಾಡಿಲ್ಲ. ಅಲ್ಲದೇ, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿಲ್ಲ ಎಂದು ಆರೋಪಿಸಿದರು.

       ಉದ್ಯಮಿಗಳಿಗೆ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಸಾಲ ಮನ್ನಾ ಮಾಡಲಿಲ್ಲ. ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಕೃಷಿ ಅಭಿವೃದ್ಧಿ ದರ ಪಾತಾಳಕ್ಕೆ ಕುಸಿದಿದೆ. ರಾಜ್ಯದ ಮಹದಾಯಿ ಯೋಜನೆಯನ್ನೂ ಕಾರ್ಯಗತಗೊಳಿಸಿಲ್ಲ. ರೈತರ ಹಿತಾಸಕ್ತಿ ಕಾಪಾಡುವಲ್ಲಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಪಿ.ರಾಜಕುಮಾರ, ಎಸ್.ಎಸ್.ಗಿರೀಶ, ಪ್ರವೀಣ, ಶಿವಕುಮಾರ ಬಾತಿ, ಪ್ರಸನ್ನ ಬೆಳಕೆರೆ, ಮಂಜುನಾಥ ರೆಡ್ಡಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link