ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅರಾಜಕತೆ ಉಂಟು ಮಾಡುತ್ತಿದ್ದು, ರಾಜಕೀಯ ದುರುದ್ದೇಶದಿಂದ ದಾಳಿ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಸರ್ಕಾರ ಸಿಬಿಐಯನ್ನು ದುರುಪಯೋಗ ಮಾಡಿ ಕೊಂಡು ಚುನಾವಣೆಯ ದೃಷ್ಟಿಯಿಂದ ದಾಳಿ ಮಾಡಿಸುತ್ತಿದೆ.ಇದನ್ನು ಮಮತಾ ಬ್ಯಾನರ್ಜಿ ಅವರು ಸಹ ವಿರೋಧ ಮಾಡಿದ್ದಾರೆ.
ನಾನು ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುತ್ತೇನೆ. ಇದೇ ಬಿಜೆಪಿಯವರು ಈ ಹಿಂದೆ ಸಿಬಿಐಯನ್ನು ಕಾಂಗ್ರೆಸ್ ಏಜೆಂಟ್ ಎಂದು ದೂರಿದ್ದರು. ಈಗ ಅವರು ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದರು. ಇದನ್ನು ಬಿಟ್ಟು ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕೆಲಸ ಮಾಡಲಿ ಎಂದು ಆಗ್ರಹಿಸಿದರು.
ಬಿಜೆಪಿಯವರಿಗೆ ಅಧಿಕಾರದ ಭ್ರಮೆ ಹಿಡಿದಿದೆ. ಒಬ್ಬೊಬ್ಬ ಎಂಎಲ್ಎಗೆ 50 ಕೋಟಿ ರೂ.ಆಫರ್ ಮಾಡುತ್ತಿದ್ದಾರೆ. ಇಷ್ಟೊಂದು ಹಣ ಬಿಜೆಪಿಯವರಿಗೆ ಎಲ್ಲಿಂದ ಬಂತು? ಎಷ್ಟೇ ಆಫರ್ ನೀಡಿದರು ನಮ್ಮ ಶಾಸಕರು ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದು ಇಲ್ಲಿನ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಯಾವುದೇ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ಮಾಡುವ ವಿಚಾರ ತೀರ್ಮಾನವಾಗಿಲ್ಲ ಎಂದರು.
ಇನ್ನು 8ರಂದು ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/Siddaramaiah-DH.gif)