ಹುಳಿಯಾರು
ಬಯೋಮೆಟ್ರಿಕ್ ಹಾಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ತಂಡ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ತಂಡ ಹಂದನಕೆರೆ ಹಾಗೂ ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ನವ್ಯಬಾಬು, ಸದಸ್ಯ ವೈ.ಸಿ.ಸಿದ್ದರಾಮಯ್ಯ, ಕೆಂಪಚೌಡಯ್ಯ, ಚನ್ನಮಲ್ಲಪ್ಪ, ಗಾಯತ್ರಿ ತಂಡದಲ್ಲಿದ್ದರು. ಹಂದನಕೆರೆ ಮತ್ತು ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ಬಯೋಮೆಟ್ರಿಕ್ ಹಾಗೂ ಸಿಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಚಂದ್ರಕಲಾ, ಆರೋಗ್ಯ ಕೇಂದ್ರಗಳಲ್ಲಿನ ಬಯೋಮೆಟ್ರಿಕ್ ಅಳವಡಿಸಿಕೊಂಡಿದ್ದಾರೆಯೇ ಎಂದು ಪರಿಶೀಲಿಸಲಾಗಿದೆ ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಹಾಗೂ ಅಧಿಕಾರಿಗಳು ಇದ್ದರು.
ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಿಗೆ ಬಯೋಮೆಟ್ರಿಕ್ ಹಾಗೂ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸಲು 2 ರೂ. ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಗುಬ್ಬಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಲ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಕಳಪೆ ಸಾಮಗ್ರಿಗಳನ್ನು ಅಳವಡಿಸಿದ್ದು ಯಾವುದೂ ಸಹ ಕೆಲಸ ನಿರ್ವಹಿಸುತ್ತಿಲ್ಲ.
ಆದರೂ ಸಹ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಪರಿಶೀಲಿಸದೆ ಒತ್ತಡಕ್ಕೆ ಮಣಿದು ಹಣ ಮಂಜೂರು ಮಾಡಿದ್ದಾರೆ. ಹಣ ಸಂಪೂರ್ಣವಾಗಿ ದುರುಪಯೋಗವಾಗಿದೆ ಎಂದು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಸದಸ್ಯ ವೈ.ಸಿ.ಸಿದ್ದರಾಮಯ್ಯ ತಿಳಿಸಿದರು.