ಬೆಂಗಳೂರು
ಮೈಸೂರಿನ ಹೊರವಲಯ ನಾಗನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಿರುವ ಹೊಸ ರೈಲು ನಿಲ್ದಾಣದ ಯೋಜನಾ ವರದಿ ಸದ್ಯದಲ್ಲೇ ರೈಲ್ವೆ ಮಂಡಳಿಗೆ ಸಲ್ಲಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
2018-19ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಈ ಯೋಜನೆಯನ್ನು ಸರ್ಕಾರ ಪ್ರಕಟಿಸಿತ್ತು. ಇದಲ್ಲದೆ, ಇದೇ ವರ್ಷ ಫೆಬ್ರವರಿಯಲ್ಲಿ ಮೈಸೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವ ದರ್ಜೆಯ ಹೊಸ ರೈಲು ನಿಲ್ದಾಣವನ್ನು ಹೊರವಲಯದಲ್ಲಿ ನಿರ್ಮಾಣ ಮಾಡುವುದಾಗಿ ಪುನರುಚ್ಚರಿಸಿದರು.
ಹಲವಾರು ತಿಂಗಳ ಬಳಿಕ ಈಗ ಇದರ ಬಗ್ಗೆ ವಿವರವಾದ ಯೋಜನಾ ವರದಿ ಸಿದ್ಧಗೊಂಡಿದೆ. ನಾಗನಹಳ್ಳಿಯಲ್ಲಿ 789 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವ ದರ್ಜೆಯ ರೈಲು ನಿಲ್ದಾಣವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ 347 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ.
ಈ ಯೋಜನೆ ಪೂರ್ಣಗೊಂಡ ನಂತರ ಮೈಸೂರಿಗೆ ಪ್ರತಿನಿತ್ಯ 90 ರಿಂದ 100 ರೈಲುಗಳು ಸಂಚಾರ ಮಾಡಲಿವೆ ಎಂದು ರೈಲ್ವೆ ಅಧಿಕಾರಿಗಳನ್ನು ಉಲ್ಲೇಖಿಸಿ ವಾರ್ತಾ ಸಂಸ್ಥೆ ವರದಿ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








