ತುಮಕೂರು
ಬರುವ ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಯಾರೊಬ್ಬರೂ ಮತದಾನದಿಂದ ಹೊರಗುಳಿಯಬಾರದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ಕೋರಾದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಮತದಾರರ ಜಾಗೃತಿ ಶಿಬಿರವನ್ನುದ್ದೇಶಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮತದಾನದ ಕುರಿತು ಈಗಾಗಲೇ ಜಿಲ್ಲೆಯ ಗ್ರಾಮಪಂಚಾಯಿತಿಗಳಲ್ಲಿ ವಿವಿಪ್ಯಾಟ್, ಇವಿಎಂ ಮತಯಂತ್ರ ಬಳಕೆ ಹಾಗೂ ಮತದಾನದ ಮಹತ್ವದ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಚುನಾವಣೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು. ಮತದಾನವು ಪವಿತ್ರವಾದ ಕಾರ್ಯವಾಗಿದ್ದು, ಯಾರೂ ಸಹ ಈ ಕಾರ್ಯದಿಂದ ವಿಮುಖರಾಗಬಾರದು ಎಂದು ತಿಳಿಸಿದರು.
ಹಲವಾರು ಕಾರಣಾಂತರಗಳಿಂದ ಮನೆಯಿಂದ ಹೊರಗುಳಿದವರು ಈ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿದ್ದು, ಕೇಂದ್ರದಲ್ಲಿ ನೆಲಸಿರುವವರು ಯಾವುದೇ ಕಾರಣಕ್ಕೂ ಮತದಾನದಿಂದ ಹೊರಗುಳಿಯದೇ ಮತ ಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ದೇವರಾಜ್ ಮಾತನಾಡುತ್ತ ಕೇಂದ್ರದಲ್ಲಿ ಚುನಾವಣಾ ಗುರುತಿನ ಚೀಟಿ ಹೊಂದಿರುವ ಎಲ್ಲರಿಗೂ ಮತ ಚಲಾಯಿಸಲು ವಾಹನ ಸೌಲಭ್ಯ ಕಲ್ಪಿಸಲಾಗುವುದು. ಕಡ್ಡಾಯವಾಗಿ ಎಲ್ಲಾ ಮತದಾರರು ಮತ ಚಲಾಯಿಸಬೇಕೆಂದು ತಿಳಿಸಿದರು.
ಜಿಲ್ಲಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಅಧಿಕಾರಿ ರಾಜ್ಕುಮಾರ್ ಮಾತನಾಡಿ, ಮತ ಚಲಾಯಿಸಲು ನಿರ್ಲಕ್ಷ್ಯತೆ ತೋರಬಾರದು. ಪ್ರತಿಯೊಬ್ಬರ ಮತವೂ ಅಮೂಲ್ಯವಾದುದು. ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆರಿಸಬೇಕೆಂದು ತಿಳಿಸಿದರು.
ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ದಾಖಲಾಗಿರುವ ಹಲವರಲ್ಲಿ ಹಿಂದಿ ಭಾಷಿಕರಿದ್ದು, ಅವರಿಗೆ ಅರ್ಥವಾಗುವ ರೀತಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅವರು ಹಿಂದಿ ಭಾಷೆಯಲ್ಲಿಯೇ ಮತದಾನ ಮಹತ್ವ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಇವಿಎಂ ಹಾಗೂ ವಿವಿಪ್ಯಾಟ್ ಮತ ಯಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆ ಮುಖಾಂತರ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿಯ ಸದಸ್ಯ ಮಹಂಕಾಳಪ್ಪ, ರಂಗೇಗೌಡ, ರಾಜಶೇಖರ್, ಶೇಖರ್, ಶ್ರೀನಿವಾಸ್, ನಟರಾಜ್, ರಮೇಶ್ ಹಾಗೂ ಕೋರ ಗ್ರಾಮ ಪಂಚಾಯ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
