ಗುಬ್ಬಿ
ಮಕ್ಕಳಲ್ಲಿ ಶಿಸ್ತು, ಪರಿಸರ ಪ್ರೇಮ, ಸಮಯ ಪ್ರಜ್ಞೆ ಸೇರಿದಂತೆ ಸಮಾಜ ಸೇವಾ ಕಾರ್ಯದಲ್ಲಿ ತಮ್ಮ ತಾವು ತೊಡಗಿಸಿಕೊಳ್ಳು ವಂತಹ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಹೆಚ್ಚು ಸಹಕಾರಿಯಾಗುತ್ತದೆ ಎಂದು ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಜಿ.ಕಲ್ಪನ ತಿಳಿಸಿದರು.
ತಾಲ್ಲೂಕಿನ ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರೌಢಶಾಲಾ ಹಂತದಲ್ಲಿಯೆ ವಿದ್ಯಾರ್ಥಿಗಳಿಗೆ ಸೇವಾ ಮನೋಬಾವ ಬೆಳೆಸಿಕೊಳ್ಳುವುದರ ಜೊತೆಗೆ ಉತ್ತಮ ಸಾಮಾಜಿಕ ಮೌಲ್ಯಗಳನ್ನು ಕಲಿತುಕೊಳ್ಳಲು ಇಂತಹ ಘಟಕಗಳು ಪರಿಣಾಮಕಾರಿಯಾಗುತ್ತವೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಹುಚ್ಚಯ್ಯ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿವಿಧ ಸಮಾಜ ಸೇವಾ ಕಾರ್ಯಗಳ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಉತ್ತಮ ಸಹಕಾರಯಾಗುತ್ತವೆ ವಿದ್ಯಾರ್ಥಿಗಳು ಘಟಕದ ಮೂಲಕ ಸಂಘಟನೆ, ಸೇವಾ ಮನೋಭಾವ, ಸಮಯಪ್ರಜ್ಞೆ ಮತ್ತು ಪರಿಸರ ಸಂರಕ್ಷಣೆಯಂತಹ ಉತ್ತಮ ಗುಣಗಳನ್ನು ಬೆಳೆಸಿಕೊಂಡು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃಧ್ದಿ ಹೊಂದುವಂತೆ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಎಂ.ಮಲ್ಲಿಕಾರ್ಜುನಯ್ಯ ಮಾತನಾಡಿ ರಾಷ್ಟ್ರೀಯ ಸೇವಾಯೋಜನೆಯ ಮಹತ್ವ, ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳು ಘಟಕದಲ್ಲಿ ಭಾಗವಹಿಸುವಿಕೆ ಬಗ್ಗೆ ಸಮಗ್ರವಾಗಿ ತಿಳಿಸಿದರು.
ವೃತ್ತಿ ಶಿಕ್ಷಣ ಶಿಕ್ಷಕ ಬಿ.ಟಿ.ನಾಗರಾಜು ವಿದ್ಯಾಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನಾ ಪ್ರತಿಜ್ಞೆ ಬೋಧಿಸಿದರು. ಘಟಕ ಉದ್ಘಾಟನೆ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ್, ಗ್ರಾಮದ ಮುಖಂಡ ಚನ್ನೇಗೌಡ, ಶಿಕ್ಷಕರಾದ ವಸಂತ, ಮಾರುತಿ, ಮೋಹನ್ ರಾಜ್, ಸುಕನ್ಯ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
