ಬೆಂಗಳೂರು
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಒಟ್ಟಾಗಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದ್ದು, ಬಿಜೆಪಿಯನ್ನು ಅತಿ ಕಡಿಮೆ ಸ್ಥಾನಗಳಿಗೆ ಸೀಮಿತಗೊಳಿಸಲು ಒಟ್ಟಾಗಿ ಶ್ರಮಿಸುವುದೇ ನಮ್ಮ ಮುಂದಿನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಹಳೆ ಮೈಸೂರು ಭಾಗದ ಮಾಜಿ ಶಾಸಕರು, ಮಾಜಿ ಸಚಿವರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ, ಹಾಸನ, ಮೈಸೂರು ಭಾಗದಲ್ಲಿ ಜೆಡಿಎಸ್ -ಕಾಂಗ್ರೆಸ್ ನೇರಾ ಪ್ರತಿಸ್ಪರ್ಧಿಗಳಾಗಿದ್ದು, ಮೈತ್ರಿ ಸರ್ಕಾರ ರಚನೆ ಹಿನ್ನಲೆಯಲ್ಲಿ ಸ್ಥಳೀಯ ಮಟ್ಟದಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿ ಸ್ಥಾನ ಹಂಚಿಕೆ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಮುಖಂಡರು ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ಇಟ್ಟಿರುವುದು ಸಹಜ. ಆದರೆ ಮೈತ್ರಿ ಪಕ್ಷಗಳ ನಾಯಕರು ಅಂತಿಮವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ದಿನೇಶ್ ತಿಳಿಸಿದರು.
ಪಕ್ಷದ ಮುಖಂಡರು ಸರ್ಕಾರದ ವಿರುದ್ದ ಹೇಳಿಕೆ ನೀಡಬಾರದು. ಸಮಸ್ಯೆಗಳೇನೆ ಇದ್ದರೂ ನೇರವಾಗಿ ಶಾಸಕಾಂಗ ನಾಯಕರು ಅಥವಾ ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎರಡು ಪಕ್ಷಗಳ ನಾಯಕರೂ ಇದನ್ನು ಪಾಲಿಸಬೇಕು ಎಂದರು.
ಲೋಕಸಭಾ ಚುನಾವಣಾ ಸ್ಥಾನ ಹೊಂದಾಣಿಕೆಯಾದ ಬಳಿಕ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದೇ ಪರಮ ಗುರಿಯಾಗಿದೆ. ಈ ಜವಾಬ್ದಾರಿಯನ್ನು ಮೈಸೂರು ಪ್ರಾಂತ್ಯದ ನಾಯಕರಿಗೆ ಶಾಸಕಾಂಗ ನಾಯಕ ಸಿದ್ದರಾಮಯ್ಯ ಈಗಾಗಲೇ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನದ ಬಳಿಕ ಕ್ಷೇತ್ರಗಳ ಹಂಚಿಕೆ ಸ್ಪಷ್ಟವಾಗಲಿದೆ. ಆದಷ್ಟು ಶೀಘ್ರದಲ್ಲಿ ಸಭೆ ಸೇರಿ ಸ್ಥಾನ ಹಂಚಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಫೆಬ್ರವರಿ 6 ರಂದು ಪಕ್ಷದ ಸರ್ವ ಸದಸ್ಯರ ಸಭೆ ಕರೆಯಲಾಗಿದೆ. ಅಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಿದ್ದತೆ , ತಯಾರಿ, ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಚೆರ್ಚೆ ನಡೆಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
