ಸೋಂಕು ಹರಡದಂತೆ ತಡೆಯುವುದು ನಮ್ಮ ಆದ್ಯತೆ: ಜೆ.ಸಿ.ಮಾಧುಸ್ವಾಮಿ

ತುಮಕೂರು

    ತುಮಕೂರು ಜಿಲ್ಲೆಯಲ್ಲಿ ಮನೆಯಿಂದ ಮನೆಗೆ ಹಾಗೂ ಹಳ್ಳಿಯಿಂದ ಹಳ್ಳಿಗೆ ಕೋವಿಡ್ ಹರಡದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

   ಪಾವಗಡದಲ್ಲಿ ನಡೆದ ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತ ಸಭೆಯ ನಂತರ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 40-41 ಕಂಟೈನ್‍ಮೆಂಟ್ ವಲಯಗಳನ್ನು ಮಾಡಲಾಗಿದೆ. ಹೋಮ್ ಕ್ವಾರಂಟೈನ್‍ನಲ್ಲೂ ಸಾಕಷ್ಟು ಜನರು ಇದ್ದಾರೆ. ನಾವು ನಿರೀಕ್ಷಿತ ಮಟ್ಟದಲ್ಲಿ ನಿಯಂತ್ರಣ ಕ್ರಮಗಳು ತಾಲ್ಲೂಕಿನಲ್ಲಿ ಅನುಷ್ಠಾನಗೊಂಡಿಲ್ಲ ಎಂದ ಅವರು, ಮುಂದಿನ ಐದಾರು ದಿನಗಳಲ್ಲಿ ಎಲ್ಲವೂ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

    ಕಂಟೈನ್‍ಮೆಂಟ್ ವಲಯಗಳಲ್ಲಿ ಓಡಾಟಕ್ಕೆ ಅವಕಾಶ ನೀಡಬಾರದು. ಸೋಂಕು ಹರಡದಂತೆ ಕ್ರಮವಹಿಸಬೇಕಾಗಿದೆ. ನಿಯಮ ಉಲ್ಲಂಘಿಸುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಏನಾದರೂ ಮಾಡಿ ಸೋಂಕನ್ನು ಹತೋಟಿಗೆ ತರಬೇಕು ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮುಂದಿನ ವಾರದಲ್ಲಿ ಪ್ರಗತಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

  ಗಡಿಭಾಗಕ್ಕಿಂತ ನಮಗೆ ಬೆಂಗಳೂರು ಸಮಸ್ಯೆಯಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಲಾಕ್‍ಡೌನ್ ಎಂದು ಗೊತ್ತಾದ ಮೇಲೆ ಬಹಳಷ್ಟು ಜನ ಹಳ್ಳಿಗಳಿಗೆ ವಾಪಸ್ಸಾಗುತ್ತಿದ್ದಾರೆ. ಅದನ್ನು ಹೇಗೆ ನಿಯಂತ್ರಿಸಬೇಕು ಎಂಬುದರ ಬಗ್ಗೆ ಒಂದರೆಡು ದಿನಗಳಲ್ಲಿ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

   ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ವೆಂಕಟರಮಣಪ್ಪ, ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್, ಉಪವಿಭಾಗಾಧಿಕಾರಿ ಡಾ: ಕೆ. ನಂದಿನಿದೇವಿ, ಕಾರ್ಯಕ್ರಮಾಧಿಕಾರಿ ಮಹಿಮಾಪಾಟೀಲ್, ಡಿಹೆಚ್‍ಓ ಡಾ: ನಾಗೇಂದ್ರಪ್ಪ, ತಹಶೀಲ್ದಾರ್ ವರದರಾಜು, ಇಓ ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link