ಮೇಕೆದಾಟು : ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಒಪ್ಪಿಗೆ

ಬೆಳಗಾವಿ

         ಕಾವೇರಿ ನದಿ ಪಾತ್ರದ ಕನಕಪುರ ಸಮೀಪ ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿರುವ ಕುಡಿಯುವ ನೀರು ಉದ್ದೇಶದ ಸಮತೋಲಿತ ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ರಾಜ್ಯ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಲೋಕಸಭೆಗೆ ತಿಳಿಸಿದ್ದಾರೆ.

           ಕಾಂಗ್ರೆಸ್ ನ ಡಿ.ಕೆ. ಸುರೇಶ್ ಹಾಗೂ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ‘ಕುಡಿಯುವ ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶದ ಮೇಕೆದಾಟು ಅಣೆಕಟ್ಟೆ ಯೋಜನೆ ಸಂಬಂಧ ಸರ್ಕಾರ ಕಾರ್ಯಸಾಧ್ಯತಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿ ಡಿಪಿಆರ್ ಸಿದ್ಧಪಡಿಸಲು ಅವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಕೇಂದ್ರ ಜಲ ಆಯೋಗದ ಪರಿಶೀಲನಾ ಸಮಿತಿಯು ಕಳೆದ ಅಕ್ಟೋಬರ್ 24 ರಂದು ಕೆಲವು ಷರತ್ತುಗಳೊಂದಿಗೆ ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ‘ ಎಂದು ತಿಳಿಸಿದ್ದಾರೆ.

            ಕರ್ನಾಟಕ ಡಿಪಿಆರ್ ಸಿದ್ಧಪಡಿಸುವಾಗ ಕಾವೇರಿ ಕಣಿವೆಯ ಇತರೆ ರಾಜ್ಯಗಳ ಅಭಿಪ್ರಾಯವನ್ನೂ ಪರಿಗಣಿಸಬೇಕು. ಇದರಿಂದ ಸೌಹಾರ್ದತೆ ಸಾಧಿಸಲು ಸಹಕಾರಿಯಾಗಲಿದೆ. ಜತೆಗೆ ಸಂಭವನೀಯ ಬಿಕ್ಕಟ್ಟು ಬಗೆಹರಿಸಬಹುದು ಎಂದು ಸಲಹೆ ಮಾಡಿದ್ದಾರೆ.ಕಾವೇರಿ ನೀರು ನಿರ್ವಹಣಾ ಮಂಡಳಿ ಒಪ್ಪಿರುವ ಹಾಗೂ ಸುಪ್ರೀಂ ಕೋರ್ಟ್ ಮಾರ್ಪಾಡು ಮಾಡಿದ ಕಾವೇರಿ ಜಲವಿವಾದ ನ್ಯಾಯಾಧಿಕರಣ ನೀಡಿದ ತೀರ್ಪು ಅನುಷ್ಠಾನಕ್ಕೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯು ಕರ್ನಾಟಕದ ಡಿಪಿಆರ್ ಅನ್ನು ಪರಿಗಣಿಸುವುದು ಅಗತ್ಯವಾಗಿದೆ ಎಂದು ಅವರು ತನ್ನ ಉತ್ತರದಲ್ಲಿ ವಿವರಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link