ಬೆಂಗಳೂರು
ಬಹು ಭಾಷಾ ನಟ ಪ್ರಕಾಶ್ ರೈ ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಮೂಲಕ ಬಹಳ ದಿನಗಳಿಂದ ಹರಿದಾಡುತ್ತಿದ್ದ ಉಹಾಪೆÇೀಹಗಳಿಗೆ ತೆರೆ ಎಳೆದಿದ್ದಾರೆ.
ಹೊಸ ವರ್ಷದದಲ್ಲಿ ಟ್ವೀಟ್ ಮಾಡಿರುವ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾರೆ.
“ಪ್ರತಿಯೊಬ್ಬರಿಗೂ ಹೊಸ ವರ್ಷದ ಶುಭಾಷಯಗಳು. ಹೊಸ ಆರಂಭ ಹೆಚ್ಚಿನ ಜವಾಬ್ದಾರಿ? ನಿಮ್ಮೆಲ್ಲರ ಬೆಂಬಲದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಸ್ಪರ್ಧಿಸುವ ಕ್ಷೇತ್ರದ ವಿವರವನ್ನು ಶೀಘ್ರ ಬಹಿರಂಗಪಡಿಸುತ್ತೇನೆ. ಅಬ್ ಕಿ ಬಾರ್ ಜನತಾ ಕಿ ಸರ್ಕಾರ್, ಜನರ ಧ್ವನಿಯನ್ನು ಸಂಸತ್ತಿನಲ್ಲೂ ಕೇಳಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ರಾಜಕೀಯ ಪ್ರವೇಶಿಸುವ ಅವರ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಕೆಲವರು ರಾಜಕೀಯ ಜೀವನ ಶುಭವಾಗಲಿ ಎಂದು ಹಾರೈಸಿದ್ದಾರೆ.
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಳಿಕ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಪ್ರಕಾಶ್ ರೈ, ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. “ಜಸ್ಟ್ ಆಸ್ಕಿಂಗ್” ಎಂಬ ಹ್ಯಾಷ್ಟ್ಯಾಗ್ ಮೂಲಕ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಪ್ರಶ್ನಿಸಿದ್ದರು.
ಅವರ ವಿರುದ್ಧ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದವು. ಸಂಸದ ಪ್ರತಾಪ್ ಸಿಂಹ ಹಾಗೂ ರೈ ನಡುವೆ ಟ್ವೀಟ್ ಸಮರ ಕೂಡ ನಡೆದಿತ್ತು. ಇದೀಗ ಅಂತಿಮವಾಗಿ ರಾಜಕೀಯ ಪ್ರವೇಶ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ರೈ ರಾಜಕೀಯ ಪ್ರವೇಶದಿಂದಾಗಿ ಮುಂಬರುವ ಲೋಕಸಭಾ ಚುನಾವಣಾ ಕಣ ಇನ್ನಷ್ಟು ರಂಗೇರುವ ಸಾಧ್ಯತೆ ಕಾಣುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
