ಬೆಂಗಳೂರು
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಪ್ರಬಲ ಅಸ್ತ್ರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಜನತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ, ಕುಟುಂಬದವರೊಂದಿಗೆ ಹೆಚ್ಚಿನ ಸಮಯ ಕಳೆಯುವಂತೆ ಟ್ವೀಟ್ ಮೂಲಕ ಸಲಹೆ ಮಾಡಿದ್ದಾರೆ.
ದೈಹಿಕ, ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು, ಹಿರಿಯ ನಾಗರಿಕರು ಮತ್ತು ಮಕ್ಕಳನ್ನು ಮನೆಯಲ್ಲಿಯೇ ಇರಿಸಿ, ಸೂಕ್ತ ರಕ್ಷಣಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಬುದ್ದಿಮಾತು ಹೇಳಿದ್ದಾರೆ.
ನಕಾರಾತ್ಮಕ ಸುದ್ದಿಗಳಿಂದ ಆದಷ್ಟು ದೂರವಿರಿ, ಯೋಗ, ವ್ಯಾಯಾಮ, ಧ್ಯಾನ, ಮನೆ ಕೆಲಸದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಿ, ನಿಮ್ಮ ಹವ್ಯಾಸ, ಅಭಿರುಚಿಯಲ್ಲಿ ಸಕರಾತ್ಮಕ ಅಂಶಗಳು ಇರಲಿ, ಮನೆಯಲ್ಲಿಯೇ ಮನೋರಂಜನೆಗೆ ಒತ್ತು ನೀಡಿ ಎಂದಿದ್ದಾರೆ. ಕೋವಿಡ್-19 ಸಂಕಷ್ಟ ಸಂದರ್ಭದಲ್ಲಿ ಅಗತ್ಯ ಎನಿಸಿದರೆ ಕೂಡಲೇ ವೈದ್ಯಕೀಯ ನೆರವು ಪಡೆದುಕೊಳ್ಳುವಂತೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ ಮಾಡಿದ್ದಾರೆ.
ಈ ನಡುವೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗೆ ರಾಜ್ಯ ಸರ್ಕಾರ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ. ಸರ್ಕಾರ ಸೋಂಕು ನಿಯಂತ್ರಣ ಕ್ರಮಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದು, ಎಚ್ಎಎಲ್ನಿಂದ ಸಜ್ಜುಗೊಳಿಸಲಾಗಿರುವ 160 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
