ಚಿತ್ರದುರ್ಗ:
ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಲಕ್ಷ್ಮಿನಾರಾಯಣ ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಚಿತ್ರದುರ್ಗ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಎನ್.ಎಸ್.ಎಸ್.ಘಟಕ ವತಿಯಿಂದ ರಂಗಯ್ಯನಬಾಗಿಲು ಸಮೀಪವಿರುವ ಉದ್ಯಾನವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಸ್ಮಾರಕಗಳ ಸ್ವಚ್ಚತೆ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸ್ವಚ್ಚತೆ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಹಿಂದಿನಿಂದಲೂ ಎನ್.ಎಸ್.ಎಸ್.ಮಾಡಿಕೊಂಡು ಬರುತ್ತಿದೆ. ಮಾನವ ಸಂಘ ಜೀವಿ. ಭಾರತ ಐತಿಹಾಸಿಕ ಸ್ಮಾರಕಗಳಿಂದ ಕೂಡಿದೆ. ಹಳೆ ಕಟ್ಟಡಗಳು, ವೀರಗಲ್ಲು, ಸ್ಮಾರಕ, ಮಾಸ್ತಿಕಲ್ಲುಗಳು ಹೂತು ಹೋಗುತ್ತಿವೆ. ಇವುಗಳ ರಕ್ಷಣೆಗಾಗಿ ಪುರಾತತ್ವ ಇಲಾಖೆ ಸಾಕಷ್ಟು ಶ್ರಮಿಸುತ್ತಿದೆ. ವಿದ್ಯಾರ್ಥಿನಿಯರಾದ ನೀವುಗಳು ಸ್ಮಾರಕಗಳ ಉಳಿನತ್ತ ನಿಗಾಹರಿಸಬೇಕಿದೆ ಎಂದು ಹೇಳಿದರು.
ಐತಿಹಾಸಿಕ ಚಿತ್ರದುರ್ಗದ ಏಳುಸುತ್ತಿನ ಕೋಟೆ ಭಾರತದಲ್ಲಿಯೇ ಪ್ರಸಿದ್ದಿ ಪಡೆದಿದೆ. ಅತಿಕ್ರಮಣವಾಗುವುದನ್ನು ತಡೆಯಬೇಕಿದೆ. ವಿನ್ಯಾಸ, ತಾಂತ್ರಿಕತೆ, ವಾಸ್ತುಶಿಲ್ಪಗಳನ್ನು ಸಂರಕ್ಷಿಸಬೇಕಿದೆ. ವಿಗ್ರಹ, ಶಾಸನ, ಆಯುಧ, ತಾಳೆಗರಿಗಳು, ವೀರಗಲ್ಲುಗಳು ಎಲ್ಲಿಯಾದರೂ ಕಂಡು ಬಂದಲ್ಲಿ ಪುರಾತತ್ವ ಇಲಾಖೆಗೆ ತಿಳಿಸಿ ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡುತ್ತ ಕೋಟೆ, ಕೊತ್ತಲ, ಸ್ಮಾರಕಗಳನ್ನು ಉಳಿಸುವ ಪ್ರಜ್ಞೆಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೂಡಿಸಿಕೊಳ್ಳಬೇಕು. ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತ ಕೆಲಸ ಮಾಡಿದರೆ ಮುಂದಿನ ಪೀಳಿಗೆಯವರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸ್ಮಾರಕಗಳ ಉಳಿವಿಗೆ ಹೆಚ್ಚಿನ ಗಮನ ಕೊಡಿ ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಪುರಾತತ್ವ ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಹ್ಲಾದ್ ಮಾತನಾಡಿ ಐತಿಹಾಸಿಕ ಸ್ಮಾರಕಗಳನ್ನು ಉಳಿಸುವುದಕ್ಕಾಗಿಯೇ ನಮ್ಮ ಇಲಾಖೆಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಪೂರ್ವಿಕರು ಕಟ್ಟಿರುವ ಇಂತಹ ಕೋಟೆ ಕೊತ್ತಲಗಳು ಹಾಳಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕೆಂದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎಸ್.ಎಸ್.ಅಧಿಕಾರಿ ಚನ್ನಕೇಶವ ಹಾಗೂ ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ