ಬೆಂಗಳೂರು
ರೈತರ ಜಮೀನು ಸ್ವಾಧೀನ ಮಾಡಿಕೊಂಡರೆ ತಕ್ಷಣ ಹಣ ಪಾವತಿ ಮಾಡಬೇಕು.ರೈತರು ಕೋರ್ಟಿಗೆ ಹೋಗಿ ಪರಿಹಾರಕ್ಕಾಗಿ ಅರ್ಜಿ ಹಾಕುವ ಪರಿಪಾಠ ಒಳ್ಳೆಯ ಬೆಳವಣಿಯಲ್ಲ.ರೈತನ ಶಾಪ ಸರ್ಕಾರಕ್ಕೆ ತಟ್ಟದಂತೆ ನೋಡಿಕೊಳ್ಳಿ ಎಂದು ಗೃಹ ಮಂಡಲಿ ಅಧಿಕಾರಿಗಳಿಗೆ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ತಾಕೀತು ಮಾಡಿದ್ದಾರೆ.
ವಸತಿ ಇಲಾಖೆ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕ ಗೃಹ ಮಂಡಳಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು,ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ವರ್ಷದ ಬಜೆಟ್ ನಲ್ಲಿ 20 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಿದ್ದೆವು. ಅದರಲ್ಲಿ 2 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ.ನಿರ್ಮಾಣಗೊಂಡ ವಸತಿಗಳಲ್ಲಿ 1650 ಕ್ಕೂ ಅಧಿಕ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗಿದೆ. ಮುಂದಿನ ವರ್ಷ ನಾಲ್ಕು ಲಕ್ಷ ಮನೆಗಳ ನಿರ್ಮಾಣ ಗುರಿ ಹೊಂದಿದ್ದೇವೆ.ವಸತಿ ಇಲಾಖೆಯ ಮೂರು ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿ ಗುರಿ ನಿಗದಿಪಡಿಸಲಾಗಿದೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದರು.
ತೋರಣಗಲ್ಲು, ಯಲ್ಲಾಪುರ, ಒಳಗುಂದಿಯಲ್ಲಿ 150 ಎಕರೆ ಪ್ರದೇಶದಲ್ಲಿ ಮೂರು ಹೊಸ ಬಡಾವಣೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.ಈ ಯೋಜನೆಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ರಾಜೀವ್ ಗಾಂಧಿ ವಸತಿ ನಿಗಮದಿಂದ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳುವ ಯೋಜನೆಯಲ್ಲಿ ಸಹಾಯಧನ ಬಿಡುಗಡೆಯಾಗಿಲ್ಲ.ಬಾಕಿ ಸಹಾಯಧನ ಬಿಡುಗಡೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಿ ಹಣ ಬಿಡುಗಡೆ ಮಾಡುವುದಾಗಿ ವಸತಿ ಸಚಿವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
