ಚಿತ್ರದುರ್ಗ:
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿರು ವುದರಿಂದ ಅನ್ನದಾತ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಡೆಯುವುದು ಸೇರಿದಂತೆ ಅನೇಕ ಬೇಡಿಕೆಗ ಳನ್ನು ಈಡೇರಿಸುವಂತೆ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಅಖಿಲ ಭಾರತ ಕಿಸಾನ್ಸಭಾ, ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ಇತರೆ ಸಂಘಟನೆಗಳು ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ರೈತರು ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಡಾ.ಸ್ವಾಮಿನಾಥನ್ ವರದಿ ಅನ್ವಯ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಪಡಿಸಿ ರೈತರು ಕೃಷಿ ಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಿಗೊಳಿಸಿ ಋಣಮುಕ್ತ ಕಾಯಿದೆಯನ್ನು ಜಾರಿಗೆ ತರಬೇಕು. ರಾಜ್ಯದ ಪ್ರವಾಹ ಪೀಡಿತರಿಗೆ ಕೂಡಲೆ ಪರಿಹಾರ ವಿತರಿಸಬೇಕು. ಬಗರ್ಹುಕುಂ ಸಾಗುವಳಿ ಭೂಮಿಯನ್ನು ಸಕ್ರಮಪಡಿಸಿ ರೈತ ವಿರೋಧಿ ರಾಜ್ಯ ಭೂ ಸುಧಾರಣಾ ಕಾಯ್ದೆಯನ್ನು ಕೈಬಿಡಬೇಕೆಂದು ಪ್ರತಿಭಟನಾನಿರತ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ಉದ್ಯೋಗ ಖಾತ್ರಿ ಯೋಜನೆಯನ್ನು ರೈತ ಸ್ನೇಹಿಯಾಗಿ ಮಾರ್ಪಡಿಸಿ ಆರ್.ಸಿ.ಇ.ಪಿ.ಒಪ್ಪಂದ ಮತ್ತು ಇತರೆ ದೇಶಗಳ ದ್ವಿಪಕ್ಷೀಯ ಮಾತುಕತೆಗಳಲ್ಲಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು, ಕಾಫಿ, ಮೆಣಸು, ದಾಳಿಂಬೆ, ಮಾವು ಇನನು ಮುಂತಾದ ಬೆಳೆಗಳು ಹಾಗೂ ರೈತರಿಗೆ ಪರ್ಯಾಯ ಕಸುಬಾಗಿರುವ ಹೈನುಗಾರಿಕೆಯನ್ನು ಹೊರಗಿಡುವ ತೀರ್ಮಾನದಿಂದ ಕೇಂದ್ರ ಸರ್ಕಾರ ಹಿಂದಕ್ಕೆ ಸರಿಯಬೇಕು. ಬರಪೀಡಿತ ಚಿತ್ರದುರ್ಗ ಜಿಲ್ಲೆಯ ಮಹಾತ್ವಾಕಾಂಕ್ಷಿ ಯೋಜನೆಯಾದ ಭದ್ರಾಮೇಲ್ದಂಡೆ ಕಾಮಗಾರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಂಡು ವಿಳಂಭವಾಗದಂತೆ ನಿಗಧಿತ ಸಮಯದೊಳಗೆ ಪೂರ್ಣಗೊಳಿಸಿ ರೈತರ ಬದುಕನ್ನು ಹಸನುಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ರಾಗಿ, ಶೇಂಗಾ, ಕಡಲೆಗೆ ಖರೀಧಿ ಕೇಂದ್ರಗಳನ್ನು ತೆರೆಯಬೇಕು. ಕೃಷಿಗೆ ಸಂಬಂಧಿಸಿದ ಎಲ್ಲಾ ಉಪಕರಣಗಳ ಮೇಲಿನ ಜಿ.ಎಸ್.ಟಿ.ಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪ್ರಧಾನಿ ಮೋದಿರವರ ಜೊತೆ ಮಾತುಕತೆ ನಡೆಸುವಂತೆ ಜಿಲ್ಲಾಡಳಿತದ ಮೂಲಕ ರೈತರು ರಾಷ್ಟ್ರಪತಿಗೆ ಮನವಿ ಮಾಡಿದರು.ರೈತ ಮುಖಂಡರುಗಳಾದ ನುಲೇನೂರು ಶಂಕರಪ್ಪ, ಬಸ್ತಿಹಳ್ಳಿ ಜಿ.ಸುರೇಶ್ಬಾಬು, ದೊಡ್ಡ ಉಳ್ಳಾರ್ತಿ ಕರಿಯಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಎನ್.ಕೆ.ರಾಜಶೇಖರಪ್ಪ, ಧನಂಜಯ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ರೆಡ್ಡಿಹಳ್ಳಿ ವೀರಣ್ಣ, ಚಿಕ್ಕಬ್ಬಿಗೆರೆ ರಾಜಪ್ಪ ಸೇರಿದಂತೆ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಡಗಲಪುರ ನಾಗೇಂದ್ರ ಬಣದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ