ಕಾಂಗ್ರೆಸ್ ಅಪಪ್ರಚಾರ ವಿರುದ್ಧ ಬಿಜೆಪಿ ಪ್ರತಿಭಟನೆ

ದಾವಣಗೆರೆ

        ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ಹಗರಣ ನಡೆಸಿದೆ ಎಂಬುದಾಗಿ ಆರೋಪಿಸುತ್ತಿರುವ, ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

         ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಎಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

           ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತ್‍ರಾವ್ ಜಾಧವ್, ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಯಾವುದೇ ರೀತಿಯಲ್ಲಿ ಹಗರಣ ನಡೆಸಿಲ್ಲ. ಈ ಬಗ್ಗೆ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಗೊಗೈಯಿ ಅವರ ನೇತೃತ್ವದ ತ್ರಿಸದಸ್ಯ ಪೀಠವು ರಫೇಲ್ ಹಗರಣದ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಆದರೂ ಸಹ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಗುಲಾಮ್‍ನಬಿ ಆಜಾದ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ಪದೇ ಪದೇ ಸಂಸತ್ತಿನಲ್ಲಿನ ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೇ ಎಂಬುದಾಗಿ, ಅಪಪ್ರಚಾರ ಮಾಡಿ ಸಾರ್ವಜನಿಕರ ದಾರಿ ತಪ್ಪಿಸುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

          ರಫೇಲ್ ಬಗ್ಗೆ ಅನಗತ್ಯ ಚರ್ಚೆ ಮಾಡುವ ಮೂಲಕ ಸಂಸತ್ತಿನ ಅಮ್ಯೂಲ ಸಮಯವನ್ನು ಹಾಳುಮಾಡುವುದರ ಜತೆಗೆ ದೇಶದ ಜನತೆಗೆ ತಪ್ಪು ಮಾಹಿತಿ ನೀಡುವ ಮೂಲಕ ಸೈನಿಕರ ಆತ್ಮಬಲ ಕುಗ್ಗಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‍ನ ವರ್ತನೆ ಅತ್ಯಂತ ಖಂಡನೀಯವಾಗಿದೆ ಎಂದು ಕಿಡಿಕಾರಿದರು.

          ಕೇಂದ್ರ ಸರ್ಕಾರವು ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂಬುದಾಗಿ ಹೇಳಿರುವ ಸುಪ್ರೀಂ ಕೋರ್ಟ್ ಈ ಬಗ್ಗೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಇದು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ನಿದ್ದೆಗೆಡಿಸಿದೆ. ಕಾಂಗ್ರೆಸ್‍ನವರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದ್ದರೆ, ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿ, ಸುಗಮವಾಗಿ ಸಂಸತ್ ಅಧಿವೇಶನ ನಡೆಸಲು ಅವಕಾಶ ನೀಡಿ, ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಆಗ್ರಹಿಸಿದರು.

           ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎನ್.ಶಿವಕುಮಾರ್, ಬಿ.ರಮೇಶ್ ನಾಯ್ಕ, ಕೋಶಾಧ್ಯಕ್ಷ ಕೆ.ಹೇಮಂತಕುಮಾರ್, ಪಾಲಿಕೆ ಸದಸ್ಯ ಡಿ.ಕೆ.ಕುಮಾರ್, ಮುಖಂಡರಾದ ರಾಜನಹಳ್ಳಿ ಶಿವಕುಮಾರ್, ಮುಕುಂದಪ್ಪ, ಹೆಚ್ . ಎಂ . ರುದ್ರ ಮುನಿಸ್ವಾಮಿ, ಬಾತಿ ವೀರೇಶ್, ಕರಿಬಸಪ್ಪ, ಚೇತನ್, ವಿರೇಶ್ ಪೈಲ್ವಾನ್, ಸೋಗಿ ಶಾಂತಕುಮಾರ್, ಟಿ.ಮುಕುಂದಪ್ಪ, ತರಕಾರಿ ಶಿವು, ಟಿಂಕರ್ ಮಂಜಣ್ಣ, ಡಿ.ಎಲ್.ರಾಮಚಂದ್ರ ನಾಯ್ಕ, ಅಡಾಣಿ ಸಿದ್ದಪ್ಪ, ಪ್ರಭು ಕಲ್ಬುರ್ಗಿ ಮತ್ತಿತರರು ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link