ಚಿತ್ರದುರ್ಗ:
ಉತ್ತರಪ್ರದೇಶದ ಸೋನ್ಭದ್ರ ಜಿಲ್ಲೆಯ ಘೋರಾವಾಲ್ ಪ್ರದೇಶದ ಗ್ರಾಮವೊಂದರಲ್ಲಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆಯಲ್ಲಿ ಬಿಜೆಪಿ.ಮುಖ್ಯಸ್ಥ ಮತ್ತವರ ಬೆಂಬಲಿಗರು ಗುಂಡು ಹಾರಿಸಿ ಹನ್ನೊಂದು ಜನರನ್ನು ಬಲಿತೆಗೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ ದುಃಖತಪ್ತರಿಗೆ ಸಾಂತ್ವನ ಹೇಳಲು ಹೊರಟಿದ್ದ ಎ.ಐ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿಯನ್ನು ಬಂಧಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ನಡೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ನಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಮಾತನಾಡಿ ದಲಿತರ ಭೀಕರ ಹತ್ಯೆಯನ್ನು ನೋಡಿದರೆ ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ. ಕೇಂದ್ರದಲ್ಲಿ ಬಿಜೆಪಿ.ಅಧಿಕಾರದಲ್ಲಿದೆ ಎನ್ನುವ ಕಾರಣಕ್ಕಾಗಿ ಬಿಜೆಪಿ.ಗೂಂಡಾಗಳು ಮನಸೋಇಚ್ಚೆ ಗುಂಡು ಹಾರಿಸಿರುವುದರಿಂದ ಹನ್ನೊಂದು ಮಂದಿ ದಲಿತರು ಹತರಾಗಿದ್ದಾರೆ. ಹತ್ತೊಂಬತ್ತಕ್ಕು ಹೆಚ್ಚು ಮಂದಿ ಗಾಯಗೊಂಡಿರುವವರನ್ನು ಸಮಾಧಾನಪಡಿಸಲು ಸ್ಥಳಕ್ಕೆ ತೆರಳಿದ್ದ ಪ್ರಿಯಾಂಕಾಗಾಂಧಿಯನ್ನು ಬಂಧಿಸಿರುವುದು ಯಾವ ನ್ಯಾಯ ಎಂದು ಉತ್ತರಪ್ರದೇಶದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಘೋರಾವಾಲ್ ಗ್ರಾಮದ ಪ್ರದೇಶವೊಂದರಲ್ಲಿ ವಿವಾದಿತ ಭೂಮಿಗೆ ಸಂಬಂಧಿಸಿದಂತೆ ಅಮಾಯಕ ದಲಿತರನ್ನು ಗುಂಡಿಕ್ಕಿ ಕೊಂದಿರುವುದು ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಮೃತಕುಟುಂಬಗಳಿಗೆ ಸಾಂತ್ವಾನ ಹೇಳಲು ಪ್ರಿಯಾಂಕಾಗಾಂಧಿ ತೆರಳುತ್ತಿರುವಾಗ ಮಿರ್ಜಪುರದ ಬಳಿ ಅವರನ್ನು ಅಡ್ಡಗಟ್ಟಿದ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿರುವುದರ ಹಿಂದೆ ಬಿಜೆಪಿ.ಕೈವಾಡವಿದೆ.
ದೇಶದಲ್ಲಿ ಬಿಜೆಪಿ.ಸರ್ಕಾರ ಎಲ್ಲೆಲ್ಲಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಶಾಂತಿ ಕದಡುವ ಕೆಲಸ ನಡೆಯುತ್ತಿರುವುದನ್ನು ದೇಶದ ಪ್ರತಿಯೊಬ್ಬರು ವಿರೋಧಿಸಬೇಕಿದೆ. ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿ.ಯವರು ಅಧಿಕಾರ ಹಿಡಿಯಲು ಇಲ್ಲಸಲ್ಲದ ಕುತಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಮಾರ್, ಮೋಕ್ಷರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ಸೇವಾದಳದ ಇಂದಿರಾ, ಎ.ಪಿ.ಎಂ.ಸಿ.ಉಪಾಧ್ಯಕ್ಷ ಜಯಣ್ಣ, ಜಮೀರ್, ಅಶೋಕ್ನಾಯ್ಡು, ಸೈಯದ್ ಸೈಫುಲ್ಲಾ, ಸೈಯದ್ ವಲಿಖಾದ್ರಿ, ವಸೀಂ, ಎಲ್.ತಿಪ್ಪೇಸ್ವಾಮಿ, ದುರುಗೇಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/07/3-14.gif)