ಚಳ್ಳಕೆರೆ
ಕಳೆದ ಹಲವಾರು ದಶಕಗಳಿಂದ ಜಿಲ್ಲೆಯ ಅತಿದೊಡ್ಡ ಹೋಬಳಿ ಕೇಂದ್ರವಾದ ಪರಶುರಾಮಪುರ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ನಿರಂತರವಾಗಿ ಹೋರಾಟವನ್ನು ನಡೆಸುತ್ತಿದ್ದರೂ ಸಹ ಇದುವರೆಗೂ ಸರ್ಕಾರ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಹೋರಾಟಕ್ಕೆ ಪರಶುರಾಮಪುರ ತಾಲ್ಲೂಕು ಹೋರಾಟ ಸಮಿತಿ ಸಿದ್ದತೆಯನ್ನು ನಡೆಸಿದೆ.
ಪರಶುರಾಮಪುರ ತಾಲ್ಲೂಕು ಹೋರಾಟ ಸಮಿತಿ ಪೂರ್ವ ಭಾವಿ ಸಭೆ ಮಂಗಳವಾರ ಪರಶುರಾಮಪುರದಲ್ಲಿ ನಡೆದಿದ್ದು, ಹೋರಾಟ ಸಮಿತಿ ಅಧ್ಯಕ್ಷ ಪಿಲ್ಲಹಳ್ಳಿ ಚಿತ್ರಲಿಂಗಪ್ಪ, ಕಳೆದ ಹಲವಾರು ವರ್ಷಗಳ ಹೋರಾಟ ಇದುವರೆಗೂ ಫಲನೀಡಲಿಲ್ಲ. ಸರ್ಕಾರ ನೀಡಿದ ಭರವಸೆ ಸಂಪೂರ್ಣವಾಗಿ ಸುಳ್ಳಾಗಿದ್ದು, ಮತ್ತೆ ಅನಿವಾರ್ಯವಾಗಿ ಹೋರಾಟಕ್ಕೆ ಸಜ್ಜಾಗಬೇಕಿದೆ. ಈ ಹಿನ್ನೆಲೆಯಲ್ಲಿ ಜೂನ್ 15ರಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರನ್ನು ಭೇಟಿ ಮಾಡಿ ಅವರೊಂದಿಗೆ ಚರ್ಚಿಸಿ ಜೂನ್ 20ರಂದು ಪಾದಯಾತ್ರೆ ಮೂಲಕ ಬೆಂಗಳೂರಿಗೆ ತೆರಳಿ ರಾಜ್ಯ ಸರ್ಕಾರವನ್ನು ಒತ್ತಾಯ ಪಡಿಸಲು ತೀರ್ಮಾನಿಸಲಾಗಿದೆ ಎಂದಿದ್ಧಾರೆ. ಪೂರ್ವ ಭಾವಿ ಸಭೆಯಲ್ಲಿ ಸೂರನಹಳ್ಳಿ ಶ್ರೀನಿವಾಸ್, ಜಯವೀರಚಾರಿ, ಕರಣ್ರಾಜ್, ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.