ಚಿತ್ರದುರ್ಗ:
ಭೂಮಿ ಹಕ್ಕು ಕಳೆದುಕೊಂಡು ಬಡತನ, ಹಸಿವು ಹೆಚ್ಚಾಗಿರುವುದರಿಂದ ಸರ್ಕಾರ ನಮಗೆ ಲಿಖಿತವಾಗಿ ಉತ್ತರ ನೀಡುವತನಕ ನಮ್ಮ ಧರಣಿ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯ ಪ್ರಜಾಶಕ್ತಿ ಬೋರಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಅರಣ್ಯ ಹಕ್ಕು ಸಮಿತಿಗಳ ಜಿಲ್ಲಾ ಒಕ್ಕೂಟ, ಬಗರ್ಹುಕುಂ ಸಾಗುವಳಿದಾರರ ಹೋರಾಟ ಸಮಿತಿ, ಕರ್ನಾಟಕ ಆದಿವಾಸಿ ಒಕ್ಕೂಟದ ವತಿಯಿಂದ ಭೂಮಿಯ ಹಕ್ಕಿಗಾಗಿ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಭಾನುವಾರದಿಂದ ಆರಂಭಿಸಿರುವ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದರು.
ಕಳೆದ ವರ್ಷ ಇದೇ ಜಾಗದಲ್ಲಿ 23 ದಿನ ಚಳುವಳಿ ನಡೆಸಿ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಹೆಚ್.ಆಂಜನೇಯರವರ ಶವಯಾತೆ, ಭಿಕ್ಷಾಟನೆ, ಅರೆಬೆತ್ತಲೆ ಮೆರವಣಿಗೆ, ಡಿ.ಸಿ.ಕಚೇರಿ ಎದುರು ಧರಣಿ ನಡೆಸಿ ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನು ಮಂಡಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಆರು ತಾಲೂಕುಗಳಲ್ಲಿ 27 ದಿನಗಳ ಕಾಲ 408 ಗ್ರಾಮಗಳಲ್ಲಿ ಜಾಗೃತಿ ಜಾಥ ಮಾಡಿದ್ದೇವೆ. ಐದು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಜಿಲ್ಲಾಧಿಕಾರಿಯಾಗಲಿ, ಉಪವಿಭಾಗಾಧಿಕಾರಿಯಾಗಲಿ, ಸಭೆ ನಡೆಸಿಲ್ಲ.
ಭೂಮಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವುದು ನಿಲ್ಲಿಸಬೇಕು. ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಚಿತ್ರದುರ್ಗದಲ್ಲಿ ಹೆಚ್ಚು ಅರ್ಜಿಗಳನ್ನು ಪರಿಶೀಲಿಸದೆ ಬಾಕಿ ಉಳಿಸಿಕೊಳ್ಳಲಾಗಿದೆ. ಸರ್ಕಾರ ಉನ್ನತ ಮಟ್ಟದ ಸಮಿತಿ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳುವತನಕ ನಮ್ಮ ಚಳುವಳಿಯನ್ನು ನಿಲ್ಲಿಸುವುದಿಲ್ಲ ಎಂದು ಬೆದರಿಕೆ ಹಾಕಿದರು.
ಜಿಲ್ಲೆಯ ಆರು ತಾಲೂಕಿನಲ್ಲಿ 1990-91, 1998-99 ನೇ ಸಾಲಿನಲ್ಲಿ 1 ಲಕ್ಷ ಹನ್ನೆರಡು ಸಾವಿರದ 964 ಅರ್ಜಿಗಳನ್ನು ಬಗರ್ ಹುಕುಂ ಸಮಿತಿಗೆ ಸಲ್ಲಿಸಿದ್ದು, ಎಲ್ಲಾ ಅರ್ಹತೆಯಿರುವ 53322 ಅರ್ಜಿಗಳನ್ನು ಪರಿಶೀಲನೆ ಮಾಡದೆ 28 ವರ್ಷಗಳಿಂದ ಸರ್ಕಾರ ಬಾಕಿ ಉಳಿಸಿಕೊಂಡಿದೆ. ತುರ್ತು ಕ್ರಮ ಜರುಗಿಸಿ ಸಾಗುವಳಿ ಚೀಟಿ ವಿತರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಜಿಲ್ಲೆಯಲ್ಲಿ 5573 ಅರ್ಜಿಗಳನ್ನು ಸಲ್ಲಿಸಿದ್ದು, ಕೇವಲ 347 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ಅರಣ್ಯ ಹಕ್ಕು ಕಾಯ್ದೆ ಉಲ್ಲಂಘಿಸಿ ತಿರಸ್ಕರಿಸುವ ಹುನ್ನಾರ ನಡೆಸಿ 5526 ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅರ್ಜಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಿ ಹಕ್ಕುಪತ್ರ ನೀಡಬೇಕು.
ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಸಾಗುವಳಿದಾರರ ಸ್ವಾಧೀನದಲ್ಲಿರುವ ಭೂಮಿಯನ್ನು ಗಣಿ ಮತ್ತು ಇನ್ನಿತರೆ ವ್ಯವಸಾಯೇತರ ಉದ್ದೇಶಗಳಿಗಾಗಿ ಮಂಜೂರು ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಪ್ರಜಾಶಕ್ತಿ ಬೋರಯ್ಯ ಸರ್ಕಾರವನ್ನು ಆಗ್ರಹಿಸಿದರು.
ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿ.ಸಿ.ಅಡಿಯಲ್ಲಿ ವಸತಿ ಹಕ್ಕಿಗಾಗಿ ಕಳೆದ ಸೆ.16ರವರೆಗೆ ಸಲ್ಲಿಸಿರುವ ಎಲ್ಲಾ ಫಲಾನುಭವಿಗಳ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ ಹಕ್ಕುಪತ್ರ ವಿತರಿಸಬೇಕು. ಜಿಲ್ಲೆಯಲ್ಲಿ ಐದು ಎಕರೆಗಿಂತ ಕಡಿಮೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರ ವಿರುದ್ದ ಭೂಕಬಳಿಕೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳನ್ನು ರಾಜ್ಯ ಸರ್ಕಾರದ ಇತ್ತೀಚಿನ ತೀರ್ಮಾನದಂತೆ ಮರುಪರಿಶೀಲಿಸಿ ಹಿಂದಕ್ಕೆ ಪಡೆಯಲು ಮತ್ತು ಹೊಸದಾಗಿ ಪ್ರಕರಣಗಳನ್ನು ದಾಖಲಿಸಬಾರದು ಎಂದು ಒತ್ತಾಯಿಸಿದರು
ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ನುಲೇನೂರು ಶಂಕರಪ್ಪ ಭೂಮಿ ಮತ್ತು ವಸತಿ ಹಕ್ಕು ವಂಚಿತರಿಗೆ ಸಾಗುವಳಿ ಚೀಟಿಗಳನ್ನು ನೀಡಬೇಕಾದರೆ ಮೊದಲು ಕಾನೂನು ತೊಡಕುಗಳನ್ನು ನಿವಾರಿಸಿ ಒಡೆತನದ ಹಕ್ಕು ನೀಡುವಲ್ಲಿ ಸರ್ಕಾರ ಗಮನ ಹರಿಸಲಿ ಎಂದು ಕೋರಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯ ಶಿವಕುಮಾರ್ ಗುಳಗಟ್ಟ, ಹೆಚ್.ಎನ್.ಶಿವಮೂರ್ತಿ, ನರಸಿಂಹಮೂರ್ತಿ, ಕರಿಯಪ್ಪ ಗುಡಿಮನಿ, ಷಫೀವುಲ್ಲಾ, ಸೊಲ್ಲಾಪುರ ರಂಗಣ್ಣ, ಸೂರಣ್ಣ, ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಇನ್ನು ಮುಂತಾದವರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಬಗರ್ಹುಕುಂ ಸಾಗುವಳಿದಾರರ ಹೋರಾಟ ಸಮಿತಿ ಸದಸ್ಯ ಮುಸ್ಟುರಪ್ಪ ನಿಧನಕ್ಕೆ ಸತ್ಯಾಗ್ರಹದಲ್ಲಿ ಒಂದು ನಿಮಿಷಗಳ ಕಾಲ ಸಂತಾಪ ಸೂಚಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
