ಬೆಂಗಳೂರು
ಅತಿವೃಷ್ಟಿ ಮತ್ತು ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಳೆ ಮನವಿ ಮಾಡಲಿದ್ದಾರೆ.
ಗುರುವಾರ ಮಧ್ಯಾಹ್ನ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಗೆ ಪ್ರಧಾನಿ ಕಾರ್ಯಾಲಯ ಸಮಯಾವಕಾಶ ನಿಗದಿಗೊಳಿಸಿದೆ . ಈ ಸಂದರ್ಭದಲ್ಲಿ ಬರ ಮತ್ತು ಅತಿವೃಷ್ಟಿ ಪರಿಹಾರಕ್ಕೆ ಹೆಚ್ಚಿನ ಅನುದಾನ ಕಲ್ಪಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂಗಾರು ಮತ್ತು ಹಿಂಗಾರು ಎರಡು ಅವಧಿಯಲ್ಲೂ ತೀವ್ರ ಬರದಿಂದಾಗಿ ರಾಜ್ಯದ 156 ತಾಲೂಕುಗಳು ಬರಪೀಡಿತವೆಂದು ಸರ್ಕಾರ ಘೋಷಿಸಿದ್ದು , ನಿರಂತರ 4 ವರ್ಷಗಳ ಕಾಲ ಬರದಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಹೆಚ್ಚಿನ ಬೆಳೆ ನಷ್ಟ ಪರಿಹಾರ ಪ್ರಕಟಿಸಬೇಕೆಂದು ಪ್ರಧಾನಿಯವರನ್ನು ಮುಖ್ಯಮಂತ್ರಿ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ.
ಜಿಎಸ್ಟಿ ಜಾರಿ ಬಳಿಕ ರಾಜ್ಯದ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗಿರುವ ತಾರತಮ್ಯ 3500 ಕೋಟಿ ರೂ ತಕ್ಷಣ ಭರಿಸಬೇಕು. ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಭತ್ತ,ರಾಗಿ, ತೊಗರಿ, ಹೆಸರು, ಉದ್ದು ಖರೀದಿಗೆ ಹೆಚ್ಚಿನ ಅನುದಾನ ಒದಗಿಸಬೇಕು. ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಪೂರೈಸಬೇಕು. ಮೇಕೆದಾಟು ಅಣೆಕಟ್ಟು ಯೋಜನೆಯನ್ನು ರಾಷ್ಟ್ರೀಯ ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಅನುವು ಮಾಡಿಕೊಡಬೇಕು , ಮಹದಾಯಿ ನ್ಯಾಯಾಧಿಕರಣ ತೀರ್ಪಿನ ಅಧಿಸೂಚನೆ ಹೊರಡಿಸಬೇಕು ಎಂಬುದು ಸೇರಿದಂತೆ 18 ಅಂಶಗಳ ಬೇಡಿಕೆಯ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/07/cm-hdk.jpg)