ಗುಬ್ಬಿ
ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನೀರು ಹರಿಸಲು ಕಳೆದ ಹಲವು ವರ್ಷಗಳಿಂದಲೂ ನಿರಂತರ ಹೋರಾಟ ಮಾಡುತ್ತಿರುವ ಸಚಿವರಾದ ಎಸ್.ಆರ್.ಶ್ರೀನಿವಾಸ್ ಅವರ ಬಗ್ಗೆ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರ ಕ್ರಮ ಸರಿಯಲ್ಲ. ಅನಗತ್ಯವಾಗಿ ಸಚಿವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹೆಚ್.ಆರ್.ಗುರುರೇಣುಕಾರಾಧ್ಯ ತಿಳಿಸಿದರು.
ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ಭಾರಿ ಕ್ಷೇತ್ರದ ಶಾಸಕರಾಗಿ ಇದೀಗ ರಾಜ್ಯದಲ್ಲಿ ಮಹತ್ವದ ಶಿಕ್ಷಣ ಸಚಿವರಾಗಿ ಕೆಲಸ ನಿರ್ವಹಣೆ ಮಾಡುತ್ತಿರುವ ಎಸ್.ಆರ್.ಶ್ರೀನಿವಾಸ್ ಅವರ ಮೇಲೆ ಬಿಜೆಪಿ ಮುಖಂಡರು ಏಕವಚನದಲ್ಲಿ ಮಾತನಾಡುತ್ತಿರುವುದು ಸರಿಯಲ್ಲ. ಇದನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಹೇಮಾವತಿ ವಿಚಾರದಲ್ಲಿ ನೀರುಗಂಟಿ ಎಂದು ಹೆಸರು ಪಡೆದಿರುವ ಸಚಿವರಿಗೆ ಇಡಿ ಹೇಮಾವತಿ ನೀರಿನ ವಿಚಾರ ಗೊತ್ತಿದೆ.
ಬೇರೆಯವರಿಂದ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ. ತಾಲ್ಲೂಕಿನಲ್ಲಿ ಬಹುತೇಕ ಕೆರೆಗಳಿಗೆ ನೀರು ಹರಿಸಲು ಪ್ರಮಾಣಿಕ ಪ್ರಯತ್ನ ಮಾಡಿರುವ ಸಚಿವರ ವಿರುದ್ಧ ಮಾತನಾಡಿದರೆ ಜೆಡಿಎಸ್ ಪಕ್ಷ ಎಲ್ಲಾ ರೀತಿಯ ಹೋರಾಟಕ್ಕೂ ಮುಂದಾಗಬೇಕಾಗುತ್ತದೆ. ಬಿಜೆಪಿ ಮುಖಂಡ ಜಿ.ಎನ್. ಬೆಟ್ಟಸ್ವಾಮಿ ರಾಜಕೀಯವಾಗಿ ಬೆಳೆಯಲು ನಮ್ಮ ಸಚಿವರೆ ಕಾರಣ ಇದನ್ನು ಮರೆತು ಅವರ ವಿರುದ್ಧವೆ ಮನಬಂದಂತೆ ಹೇಳಿಕೆ ನೀಡುತ್ತಿರುವುದು ಅವರ ಘನತೆಗೆ ತಕ್ಕುದಲ್ಲ ಎಂದು ತಿಳಿಸಿದರು.
ಎಪಿಎಂಸಿ ಅಧ್ಯಕ್ಷ ರೇವಣ್ಣ ಮಾತನಾಡಿ, ಸಂಸದರು ಐದು ಭಾರಿ ಆಯ್ಕೆಯಾಗಿದ್ದಾರೆ. ಆದರೆ ಗುಬ್ಬಿ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು ಎಂಬುದನ್ನು ತಿಳಿಸಿ ಆನಂತರ ಇತರೆ ವಿಚಾರಗಳ ಬಗ್ಗೆ ಚರ್ಚೆಗೆ ಬನ್ನಿ. ಅದನ್ನು ಬಿಟ್ಟು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಚಿವರ ವಿರುದ್ಧ ಮನಬಂದಂತೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅನಗತ್ಯವಾಗಿ ಸಚಿವರ ವಿರುದ್ಧ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಜೆಡಿಎಸ್ ಪಕ್ಷ ಎಲ್ಲಾ ರೀತಿಯ ಹೋರಾಟಕ್ಕೂ ಮುಂದಾಗಲಿದೆ ಎಂದು ತಿಳಿಸಿದರು.
ತಾಲ್ಲೂಕು ಯುವ ಜೆ.ಡಿಎಸ್ ಅಧ್ಯಕ್ಷ ಕೆ.ಆರ್.ವೆಂಕಟೇಶ್ ಮಾತನಾಡಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಚಿವರ ಕೊಡುಗೆ ಮಹತ್ತರವಾದುದಾಗಿದೆ. ಹೇಮಾವತಿ ನೀರನ್ನು ಕೆರೆಗಳಿಗೆ ಹರಿಸುವುದು ಸೇರಿದಂತೆ ಮನೆ ಇಲ್ಲದವರಿಗೆ ಮನೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಹತ್ತು ಹಲವು ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿರುವ ಸಚಿವರ ವಿರುದ್ದ ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಅವರ ಘನತೆಗೆ ತಕ್ಕುದಲ್ಲ ಕೂಡಲೆ ಮನಬಂದಂತೆ ಆರೋಪಮಾಡುವುದನ್ನು ನಿಲ್ಲಿಸದಿದ್ದರೆ ಉಗ್ರಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಖಂಡ ಹೊದಲೂರು ವಿಜಯ್ಕುಮಾರ್ ಮಾತನಾಡಿ, ಈ ಕ್ಷೇತ್ರಕ್ಕೆ ಸಂಸದರ ಕೊಡುಗೆ ಏನು ಎಂಬುದನ್ನು ಬಿಜೆಪಿ ಮುಖಂಡರು ತಿಳಿಸಲಿ. ಆನಂತರ ಬೇರೆಯವರ ಬಗ್ಗೆ ಮಾತನಾಡಲಿ. ಅದನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಚಿವರ ವಿರುದ್ಧ ಮಾತನಾಡುವುದು ಅವರ ಘನತೆಗೆ ತಕ್ಕುದಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಪಿಎಂಸಿ ಸದಸ್ಯ ಲೋಕೇಶ್, ಪಟ್ಟಣ ಪಂಚಾಯತಿ ಸದಸ್ಯರಾದ ರೇಣುಕಾಪ್ರಸಾದ್, ಶೌಕತ್ ಆಲಿ, ಪಪಂ ಮಾಜಿ ಸದಸ್ಯ ಕೃಷ್ಣಮೂರ್ತಿ, ಮುಖಂಡರಾದ ಜಗದೀಶ್, ರಾಜಣ್ಣ, ಹೆಚ್.ಡಿ.ಯಲ್ಲಪ್ಪ, ಹಳೇಗುಬ್ಬಿ ರಂಗಸ್ವಾಮಿ, ಜುಂಜೆಗೌಡ, ಡಾ:ನಬೀಖಾನ್, ವೆಂಕಟೇಶ್ಗೌಡ, ರಾಜಣ್ಣ, ಬಸವರಾಜು, ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
