ಬೆಂಗಳೂರು
ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಅರ್ಹತೆ ಇರುವವರು ಬಹಳಷ್ಟು ನಾಯಕರಿದ್ದಾರೆ. ಮುಂದಿನ ದಿನಗಳಲ್ಲಿ ಎಸ್ಸಿ ಸಮುದಾಯದವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ಗಾಂಧಿ ಭವನದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಆಯೋಜಿಸಿದ್ದ ಬಿ.ಬಸವಲಿಂಗಪ್ಪನವರ ಒಂದು ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 2004ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿದ್ದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಯಾಗುತ್ತಿದ್ದರು. ಖರ್ಗೆಯವರು ಈಗ ಕಾಂಗ್ರೆಸ್ ಪಕ್ಷದಲ್ಲಿ ಪರಮೋಚ್ಛ ಸ್ಥಾನದಲ್ಲಿದ್ದಾರೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಎತ್ತರದ ಸ್ಥಾನಗಳನ್ನು ಅಲಂಕರಿಸಲಿದ್ದಾರೆ.ಅಂತೆಯೇ ರಾಜ್ಯದಲ್ಲಿ ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ದಲಿತ ಸಮುದಾಯದವರು ಮುಖ್ಯಮಂತ್ರಿ ಆಗುವ ಅರ್ಹತೆ ಇರುವವರು ಸಾಕಷ್ಟು ಜನ ಪಕ್ಷದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ , ಕೆ.ಎಚ್.ಮುನಿಯಪ್ಪ,ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ದಲಿತರು ಮುಖ್ಯಮಂತ್ರಿಯಾಗಲಿದ್ದಾರೆಂಬ ಸಂದೇಶವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಅನುದಾನ ನೀಡಿದ್ದೇವೆ. ಆದರೂ ಎಸ್ಸಿ/ಎಸ್ಟಿ ಸಮುದಾಯಗಳು ಕಾಂಗ್ರೆಸ್ ಪಕ್ಷದ ಬೆಂಬಲಕ್ಕೆ ಬರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದರೆ ಎಸ್ಸಿ/ಎಸ್ಟಿ ಬಡ್ತಿಮೀಸಲಾತಿ ಕಾಯ್ದೆ ಜಾರಿಗೆ ತರುತ್ತಿದ್ದೆವು. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಮೈತ್ರಿ ಸರ್ಕಾರದಲ್ಲಿದ್ದುಕೊಂಡೇ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ತಂದು ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆಂದು ಸಭೆಯಲ್ಲಿ ದಿನೇಶ್ ಗುಂಡುರಾವ್ ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/dinesh-gunduraoo.gif)