ಸಾಫ್ಟ್‍ವೇರ್ ಇಂಜಿನಿಯರ್ ಪ್ರಕರಣ ಸಿಬಿಐ ಪೊಲೀಸರು ಕೈಗೆ

ಬೆಂಗಳೂರು

      ವೈಟ್‍ಫೀಲ್ಡ್‍ನಿಂದ ಕಾರಿನಲ್ಲಿ ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಖಾಸಗಿ ಕಂಪನಿಯ ಸಾಫ್ಟ್‍ವೇರ್ ಇಂಜಿನಿಯರ್ ಅಜಿತಾಬ್ ಪ್ರಕರಣದ ತನಿಖೆಯನ್ನು ಚೆನ್ನೈನ ಸಿಬಿಐ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

     ಅಜಿತಾಬ್ ನಾಪತ್ತೆಯಾಗಿ ಒಂದು ವರ್ಷ ಕಳೆದರೂ ಪತ್ತೆಯಾಗದಿದ್ದರಿಂದ ನೊಂದ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್ ಅವರಿಗೂ ಪತ್ರ ಬರೆದು ನ್ಯಾಯಾಲಯದ ಮೊರೆ ಹೋಗಿದ್ದರು.ನ್ಯಾಯಾಲಯದ ಆದೇಶದನ್ವಯ ಚೆನ್ನೈ ಸಿಬಿಐ ಬ್ರಾಂಚ್ ನಲ್ಲಿ ಅಜಿತಾಭ್ ನಾಪತ್ತೆ ಪ್ರಕರಣ ದಾಖಲಾಗಿದ್ದು ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿದೆ.

ಸುಳಿವು ಅಲಭ್ಯ

       ಕಳೆದ ಡಿಸೆಂಬರ್‍ನಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಅಜಿತಾಬ್ ಪ್ರಕರಣ ವೈಟ್ ಫೀಲ್ಡ್ ಪೆಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಸತತ 11 ತಿಂಗಳ ಕಾಲ ಅಜಿತಾಬ್ ಗಾಗಿ ಹುಡಕಾಟ ನಡೆಸಿದ್ದರು. ಅಲ್ಲದೇ ಪ್ರಕರಣವನ್ನು ಭೇದಿಸಲು ವಿಶೇಷ ತನಿಖಾ ತಂಡವನ್ನೂ ಸಹ ರಚನೆ ಮಾಡಲಾಗಿತ್ತು. ಆದರೂ ಸಹ ಅಜಿತಾಬ್ ಬಗ್ಗೆ ಸಣ್ಣ ಸುಳಿವು ನಗರ ಪೆಲೀಸರಿಗೆ ಸಿಕ್ಕಿರಲಿಲ್ಲ.

       ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂ ನಲ್ಲಿ ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಬ್ ತನ್ನ ಸಿಯಾಜ್ ಕಾರನ್ನು ಮಾರಾಟ ಸಂಬಂಧ ಓಎಲ್‍ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್‍ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಕುಮಾರ್ ಅಜಿತಾಬ್ ಕರೆ ಬಂದಾಗಲೆಲ್ಲ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್ 18 ರಂದು ಅವರ ಮೊಬೈಲ್‍ಗೆ ಕರೆ ಬಂದಿತ್ತು. ಎಂದಿನಂತೆಯೇ ಅಜಿತಾಬ್, ಕೆಎ 03 ಎನ್‍ಎ 1751 ನಂಬರಿನ ತನ್ನ ಸಿಯಾಜ್ ಕಾರಿನಲ್ಲಿ ಹೊರ ಹೋಗಿದ್ದರು.ಹೊರ ಹೋದವರು ಇದೂವರೆಗೂ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

ವಿಶೇಷ ತಂಡಗಳ ರಚನೆ

       ಒಎಲ್‍ಎಕ್ಸ್ ಜಾಹೀರಾತು ನೋಡಿ ಅಜಿತಾಬ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದರು. ಆಗ ಪೆಲೀಸರು ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡು ಡ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಿದ್ದರು. ಕೊನೆಯ ಬಾರಿ ಅಜಿತಾಬ್ ಮೊಬೈಲ್ ಸಿಗ್ನಲ್ ಆಫ್ ಆದ ಸ್ಥಳವಾದ ವರ್ತೂರು ಸಮೀಪದ ಗುಂಜೂರು ಸಮೀಪ ಪೆಲೀಸರು ಹುಡುಕಾಟ ಪ್ರಾರಂಭಿಸಿದ್ದರು. 8 ತಂಡಗಳನ್ನು ರಚಿಸಿಕೊಂಡಿದ್ದು ಒಂದು ತಂಡ ಗುಂಜೂರು ಸುತ್ತಮುತ್ತಲಿನ ಪ್ರದೇಶಗಳು, ವರ್ತೂರು ಕೆರೆ, ಕೈಕೊಂಡ್ರಹಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸಿದ್ದರು. ಇನ್ನು 7 ತಂಡಗಳು ಬೇರೆ ರೀತಿಯಲ್ಲಿ ಹುಡುಕಾಟ ನಡೆಸಿದ್ದರು.

       ವೈಟ್ ಫಿಲ್ಡ್ ಪೆಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಜಿತಾಬ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿತ್ತು. ನಂತರ ಪೋಷಕರ ಒತ್ತಡ ಹೆಚ್ಚಾಗುತ್ತಿದ್ದಂತೆ ಈ ಕೇಸನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link