ಬೆಂಗಳೂರು:
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ. ಮುಂಚೂಣಿ ನಾಯಕರು ಜನವರಿ ತಿಂಗಳಿನಿಂದ ರಾಜ್ಯ ಸುತ್ತಲಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಹತ್ತು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಈ ಬಾರಿ ಹೆಚ್ಚು ಸ್ಥಾನಗಳನ್ನು ಪಡೆಯುವ ದೃಷ್ಟಿಯಿಂದ ಹೆಚ್ಚಿನ ಮುತುವರ್ಜಿ ವಹಿಸುತ್ತಿದೆ. ಈಗಾಗಲೇ ಎಲ್ಲ ವಿಭಾಗಗಳ ನಾಯಕರ ಜತೆ ಚರ್ಚೆ ನಡೆಸಿದ್ದು ಮುಂದಿನ ರೂಪು-ರೇಷೆಗಳನ್ನು ಸಿದ್ದಪಡಿಸಿಕೊಳ್ಳುತ್ತಿದೆ.
ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆಯೂ ಹಿರಿಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಹಾಲಿ ಸಂಸದರನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿಯೂ ಟಿಕೆಟ್ ಆಕಾಂಕ್ಷಿಗಳು ಈಗಿನಿಂದಲೇ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ ಪಕ್ಷದ ಹೈ ಕಮಾಂಡ್ ಯುವಕರಿಗೆ ಪ್ರಾಧಾನ್ಯತೆ ನೀಡಿ ಎಂದು ಹೇಳಿದೆ. ಸಮರ್ಥ ಯುವಕರ ಹುಡುಕಾಟದಲ್ಲಿ ರಾಜ್ಯದ ನಾಯಕರು ತೊಡಗಿದ್ದಾರೆ. ಈ ಬಾರಿ ಯಾವುದೇ ಕಾರಣಕ್ಕೆ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲದಂತೆ ನೋಡಿಕೊಳ್ಳಬೇಕು ಎಂಬ ಫಾರ್ಮಾನು ರವಾನೆಯಾಗಿದೆ.
ಇತ್ತೀಚಿಗೆ ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ಗೆ ವಿಶ್ವಾಸ ಹೆಚ್ಚಾಗಿದ್ದು ಈ ಬಾರಿ ನಮ್ಮ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಡುವ ಭರವಸೆ ಇದೆ ಎಂದು ನಾಯಕರು ಹೇಳುತ್ತಿದ್ದಾರೆ.
ಡಿಸೆಂಬರ್ ಕೊನೆವಾರದಲ್ಲಿ ಕಾಂಗ್ರೆಸ್ ಸಭೆ ಕರೆದು ತಂಡಗಳನ್ನು ರಚಿಸಲಾಗುತ್ತಿದೆ. ರಾಜ್ಯದ ಮುಂಚೂಣಿ ನಾಯಕರು ಇಡೀ ರಾಜ್ಯದ ತುಂಬ ಸಂಚರಿಸಿ ಪಕ್ಷ ಸಂಘಟನೆ ಮಾಡಲಿದ್ದಾರೆ. ಸಂಘಟನೆಯ ಜತೆ ಸೂಕ್ತ ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯನ್ನೂ ಸಹ ನಾಯಕರ ಹೆಗಲಿಗೆ ಹೊರಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
