ಬೆಂಗಳೂರು
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ತಿಳಿಸಿದ್ದಾರೆ.
ಜಯನಗರದ ಎನ್ಎಂಕೆಆರ್ವಿ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 11 ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಜ್ಞಾನ ವಿಷಯದ ಬಗ್ಗೆ ಇತ್ತೀಚಿನ ವಿದ್ಯಾರ್ಥಿಗಳಿಗೆ ಆಸಕ್ತಿ ಕುಂದಿರುವುದು ಆತಂಕ ತಂದಿದೆ ಎಂದರು.
ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆಯು ಕಡಿಮೆಯಾಗಿದೆ. ಇದರಿಂದ ಭವಿಷ್ಯದಲ್ಲಿ ವಿಜ್ಞಾನ ಶಿಕ್ಷಕರ ಕೊರತೆ ಕಾಡಲಿದೆ ಇಂದಿನ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಇಂದಿನ ಸಾಮಾಜಿಕ ಸಮಸ್ಯೆಗಳಿಗೆ ಸಂಶೋಧನೆ ಮೂಲಕ ಪರಿಹಾರ ಕಂಡು ಹಿಡಿಯಬೇಕಿದೆ. ಉತ್ತಮ ಸಂಶೋಧನೆಗಳಿಗೆ ಸರಕಾರವು 5 ರಿಂದ 50 ಲಕ್ಷದ ವರೆಗೆ ಪ್ರೋತ್ಸಾಹ ಧನ ನೀಡಲಿದೆ. ಹೀಗಾಗಿ ಸಂಶೋಧನೆಗೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.
ಭಾರತಕ್ಕೆ ವಿಜ್ಞಾನದ ಅಡಿಪಾಯವಿದೆ. ಈ 21 ಶತಮಾನ ವಿಜ್ಞಾನದ ಯುಗವಾಗಿದೆ. 30 ವರ್ಷಗಳ ಹಿಂದೆ ನಮ್ಮ ದೇಶ ಆಹಾರ ಉತ್ಪಾದನೆಯಲ್ಲಿ ಬೇರೆ ದೇಶಗಳನ್ನು ಅವಲಂಬಿಸಿತ್ತು. ಆದರೆ ಇಂದು ಆಹಾರ ಪದಾರ್ಥಗಳ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ಅಷ್ಟೆ ಅಲ್ಲದೆ ರಫ್ತು ಮಾಡುವ ಸಾಮಥ್ರ್ಯಕ್ಕೆ ತಲುಪಿದ್ದೇವೆ ಎಂದರು.
ಇಂದು ವಿಜ್ಞಾನದ ಬಗ್ಗೆ ಹೆಚ್ಚಿನ ಅರಿವು ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 22 ಪ್ರಾದೇಶಿಕ ಸೈನ್ಸ್ ಸೆಂಟರ್ ತೆರಯಲಾಗುತ್ತಿದೆ. ಜೊತೆಗೆ ಮೈಸೂರಿನಲ್ಲಿ 198 ಕೋಟಿ ರು. ವೆಚ್ಚದಲ್ಲಿ ಸೈನ್ಸ್ ಸಿಟಿ ತೆರೆಯಲು ಉದ್ದೇಶಿಸಲಾಗುದೆ ಎಂದು ಹೇಳಿದರು.ಸಮಾರಂಭದಲ್ಲಿ ಡಾ.ಬಿ.ವಿ. ಶ್ರೀಕಂಠನ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/27BG-PARAMESHWAR-1.gif)