ದಾವಣಗೆರೆ:
ಮೈತ್ರಿ ಧರ್ಮದಂತೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜೆಡಿಎಸ್ ಕಾರ್ಯಕರ್ತರು ಮುಖಂಡರು ಬೆಂಬಲಿಸಿ, ಗೆಲ್ಲಿಸಿಕೊಂಡು ಬರಬೇಕೆಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಸ್ ಪಾಷಾ ಕರೆ ನೀಡಿದರು.
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಹೊನ್ನಾಳಿ, ಲಿಂಗಾಪುರ, ಸಾಸ್ವೇಹಳ್ಳಿ, ಹನಗವಾಡಿ, ಹುಣಸಘಟ್ಟ ಗ್ರಾಮಗಳಿಗೆ ಜೆಡಿಎಸ್ ಮುಖಂಡರ ತಂಡದೊಂದಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಸ್ತುತ ದೇಶದಲ್ಲಿ ಲೋಕಸಭಾ ಚುನಾವಣೆ ಎದುರಾಗಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಧರ್ಮದ ಪ್ರಕಾರ ಜೆ.ಡಿ.ಎಸ್. ಪಕ್ಷಕ್ಕೆ 8 ಕಾಂಗ್ರೆಸ್ ಪಕ್ಷಕ್ಕೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಹೀಗಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆ.ಡಿ.ಎಸ್. ಬೆಂಬಲ ನೀಡಿದ್ದರಿಂದ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೋಮುವಾದಿ ಮತ್ತು ಜನವಿರೋಧಿ ಆಡಳಿತವನ್ನು ನಡೆಸುತ್ತಿರುವ ಕೇಂದ್ರದ ಬಿ.ಜೆ.ಪಿ. ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ಕೊಡಿಸಿ ಅವರ ಗೆಲುವಿಗೆ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಜೆ.ಡಿ.ಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದು, ಜನಪರ ಮತ್ತು ರೈತ ಪರ ಆಡಳಿತವನ್ನು ನಡೆಸುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯದ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಹೆಚ್.ಸಿ.ಗುಡ್ಡಪ್ಪ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಸಂಗೇಗೌಡ, ಮಾಯಕೊಂಡ ಕ್ಷೇತ್ರದ ಅಧ್ಯಕ್ಷ ಡಿ.ಶಿವಣ್ಣ ಬೆಳಲಗೆರೆ, ಜಿಲ್ಲಾ ಪ್ರಧಾನಕಾರ್ಯದರ್ಶಿ ಬಿ.ದಾದಾಪೀರ್, ಮುಖಂಡರಾದ ಹನಗವಾಡಿ ವೀರೇಶ್, ಕೃಷ್ಣಮೂರ್ತಿ, ಹೆಚ್.ಕೆ. ರಮೇಶ್, ಗುರುಪಾದಯ್ಯ ಮಠದ್, ಪೂಜಾರ್ ಬಸಪ್ಪ, ಹುಣಸಘಟ್ಟ ಶಿವಲಿಂಗಪ್ಪ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/26_dvg_06_3.gif)