ಚಳ್ಳಕೆರೆ
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಸ್ವಚ್ಚತೆಯ ಬಗ್ಗೆ ಹೆಚ್ಚು ಜನಜಾಗೃತಿ ಮೂಡಿಸಲಾಗುತ್ತಿದ್ದು, ಇದೊಂದು ಉತ್ತಮ ಅಂದೋಲವಾಗಿದೆ. ಯಾವ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡುತ್ತೇವೆಯೋ ಅಲ್ಲಿ ಯಾವುದೇ ರೋಗಗಳು ವ್ಯಾಪಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕೆಂದು ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ತಿಳಿಸಿದರು.
ಅವರು, ಶನಿವಾರ ದೇವರಮರಿಕುಂಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಚ ಶನಿವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಶನಿವಾರವೂ ಸಹ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಯ್ದ ಗ್ರಾಮಗಳಲ್ಲಿ ಈ ಅಂದೋಲನ ನಡೆಸಲು ಚಿಂತನೆ ನಡೆಸಿದ್ದು, ಗ್ರಾಮೀಣ ಭಾಗದ ಜನರು ಈ ಕಾರ್ಯಕ್ರಮದಲ್ಲಿ ಹೆಚ್ಚು ಭಾಗವಹಿಸುವಂತೆ ಮನವಿ ಮಾಡಿದರು. ಗ್ರಾಮಸ್ಥರು ತಮ್ಮ ಮನೆಗಳ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಚವಾಗಿಡಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಧರರಾಜ್ ಮಾತನಾಡಿ, ಸ್ವಚ್ಚತಾ ಅಂದೋಲನ ಜನಾಂದೋಲವಾಗಿ ಪರಿವರ್ತನೆಯಾದಾಗ ಮಾತ್ರ ಈ ಕಾರ್ಯಕ್ರಮ ಯಶಸ್ಸಿಯಾಗಲು ಸಾಧ್ಯ. ಈಗಾಗಲೇ ಗ್ರಾಮ ಪಂಚಾಯಿತಿ ಆಡಳಿತ ಕಳೆದ ಹಲವಾರು ತಿಂಗಳುಗಳಿಂದ ಗ್ರಾಮದ ಸ್ವಚ್ಚತೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿದೆ. ಗ್ರಾಮ ಸ್ವಚ್ಚವಾಗಿದ್ದಲ್ಲಿ ಮಾತ್ರ ಜನರ ಆರೋಗ್ಯ ಉತ್ತಮಗೊಳ್ಳಲು ಸಾಧ್ಯವೆಂದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
