ಬೆಂಗಳೂರು
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಇಡೀ ವಿಧಾನಸೌಧವನ್ನೇ ಭ್ರಷ್ಟಾಚಾರದ ಕೂಪವನ್ನಾಗಿ ಮಾಡಲಾಗಿದ್ದು, ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗ ಶೆಟ್ಟಿ ಅವರ ಆಪ್ತ ಸಹಾಯಕನ ಬಳಿ ಹಣದ ಕಂತೆ ದೊರೆತ ಪ್ರಕರಣದಲ್ಲಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ಸಚಿವ ಪುಟ್ಟರಂಗಶೆಟ್ಟಿ ಆಪ್ತ ಸಹಾಯಕನ ಬಳಿ ಹಣ ಸಿಕ್ಕ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದನ್ನು ನೋಡಿದರೆ ಕುಮಾರಸ್ವಾಮಿ ಅವರು ಆರೋಪಿ ಸಚಿವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡಿದೆ. ಹೀಗಾಗಿ ಮುಖ್ಯಮಂತ್ರಿ ಪುಟ್ಟರಂಗಶೆಟ್ಟಿ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈ ಬಿಟ್ಟು, ಉನ್ನತ ಮಟ್ಟದ ತನಿಖೆಗೆ ಪ್ರಕರಣವನ್ನು ಒಪ್ಪಿಸಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪುಟ್ಟರಂಗಶೆಟ್ಟಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ. ಆದರೆ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ತಡೆದಿದ್ದಾರೆ. ಮುಖ್ಯಮಂತ್ರಿಗಳು ಸಚಿವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು. ಆಳುವ ಸರ್ಕಾರ ಕುರುಡು, ಕಿವುಡು, ದಪ್ಪ ಚರ್ಮ ಹೊಂದಿದ್ದರೆ ಅದನ್ನು ಸರಿ ದಾರಿಗೆ ತರಲು ವಿಪಕ್ಷಗಳು ಹೋರಾಟ ಮಾಡೇ ತೀರುತ್ತವೆ. ರಾಜ್ಯ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದ್ದು, ಸಾಕ್ಷ್ಯನಾಶ ಮಾಡಲು ಪ್ರಯತ್ನಿಸುತ್ತಿದೆ. ಪ್ರಕರಣವನ್ನು ಎಸಿಬಿಗೆ ವಹಿಸಿ ಮುಚ್ಚಿಹಾಕುವ ವ್ಯವಸ್ಥಿತ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮೈತ್ರಿ ಸರ್ಕಾರದ ಆಡಳಿತ ದಿಕ್ಕುತಪ್ಪುತ್ತಿದ್ದು, ಸಚಿವರುಗಳು ಇಡೀ ವಿಧಾನ ಸೌಧದವನ್ನು ಭ್ರಷ್ಟಾಚಾರದ ಕೊಂಪೆಯನ್ನಾಗಿ ಮಾಡಿದ್ದಾರೆ. ಪ್ಯಾಕೆಜ್ ಟೆಂಡರ್ ಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ದೇವರಾಜ ಅರಸು ನಿಗಮದಲ್ಲಿ ಇಂತಹ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಮೀನುಗಾರಿಕೆ ಸಚಿವ ವೆಂಟರಾವ್ ನಾಡಗೌಡ ವಿರುದ್ಧ ಹರಿಹಾಯ್ದ ಕೋಟಾ ಶ್ರೀನಿವಾಸ ಪೂಜಾರಿ, ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ನಾಪತ್ತೆಯಾಗಿದ್ದು, ಅವರ ಕುಟುಂಬಗಳು ಆತಂಕದಲ್ಲಿವೆ. ಆದರೆ ಸಚಿವರಾದವರು ಸಾಂತ್ವನದ ಮಾತುಗಳನ್ನು ಆಡಬೇಕು. ಆದರೆ ಹದ್ದುಮೀರಿ ಮಾತನಾಡುವುದು ಸರಿಯಲ್ಲ. ಇಂತಹ ಬೇಜವಬ್ದಾರಿ ಸಚಿವರಿಗೆ ಮುಖ್ಯಮಂತ್ರಿ ಬುದ್ಧಿ ಮಾತು ಹೇಳಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
