ಬೆಂಗಳೂರು 
ಕೇಂದ್ರ ಸರ್ಕಾರದ ನಿರ್ದೇಶನ ಇಲ್ಲದೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡುವುದಿಲ್ಲ. ಬೆಂಗಳೂರಿನಲ್ಲಿ ಸೀಲ್ ಡೌನ್ ವಾರ್ಡ್ ಮಾಡಬೇಕೇ? ವಿಧಾನಸಭಾ ಕ್ಷೇತ್ರವಾರು ಸೀಲ್ ಡೌನ್ ಮಾಡಬೇಕೇ? ಎಂಬ ಬಗ್ಗೆ ತಜ್ಞರ ಜೊತೆ ಚರ್ಚಿಸಿ ಅವರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ, ಇದು ತುಘಲಕ್ ಸರ್ಕಾರ ಅಲ್ಲ. ಕೇಂದ್ರ ಸರ್ಕಾರ ರಾಜ್ಯವನ್ನು ನಿಮಿಷ ನಿಮಿಷಕ್ಕೂ ಗಮನಿಸುತ್ತಲೇ ಇರುತ್ತದೆ. ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು.ಈ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಏರಿಯಾ ಬಂಚ್ ಲಾಕ್ ಡೌನ್ ವಿಚಾರವಾಗಿಯೂ ಚರ್ಚೆ ಮಾಡುತ್ತೇವೆ ಎಂದರು.
ರೋಗಿಯನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಬೆಡ್ ಇಲ್ಲ ಎಂಬ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಬೆಡ್ ಇಲ್ಲ ಎಂದು ಹೇಳುವ ಸಮಸ್ಯೆ ಬರಬಾರದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದರು.ಬೆಂಗಳೂರಲ್ಲಿ ಎರಡು ಸಾವಿರ ಬೆಡ್ ಇವೆ. ಸರ್ಕಾರದಿಂದ ರೆಫರ್ ಆಗಿ ಹೋಗುವ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗದಿತ ದರದೊಂದಿಗೆ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಿದ್ದೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








