ಬೆಂಗಳೂರು
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ವರಿಷ್ಠರು ಇದೀಗ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಿದ್ದಾರೆ.ಮುಂದಿನ ಲೋಕಸಭಾ ಚುನಾವಣೆವರೆಗೆ ಹಾಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದು ಬೇಡ ಎನ್ನುವ ನಿಲುವಿಗೆ ಬಂದಿದ್ದಾರೆ.ಯಡಿಯೂರಪ್ಪ ಅವರನ್ನು ಬದಲಿಸಲಾಗುತ್ತದೆ ಎಂಬ ಸುದ್ದಿಗಳಿಗೆ ವರಿಷ್ಠರು ತೆರೆ ಎಳೆದಿದ್ದಾರೆ.
ನವೆಂಬರ್ 3 ರಂದು ನಡೆದ ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಬದಲಾಯಿಸಲಾಗುತ್ತದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದೆ.
ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ. ಈ ಸಂಬಂಧ ಪಕ್ಷದ ಯಾವುದೇ ನಾಯಕರುಗಳು ಹೇಳಿಕೆಗಳನ್ನು ನೀಡಬಾರದು ಎಂದು ರಾಜ್ಯ ನಾಯಕರಿಗೆ ತಾಕೀತು ಮಾಡಿದ್ದಾರೆ.
ಕಳೆದ ವಾರ ಮಂಗಳೂರಿನಲ್ಲಿ ನಡೆದಿದ್ದ ಆರ್ಎಸ್ಎಸ್ ಬೈಠಕ್ನಲ್ಲಿ ಸಂಘ ಪರಿವಾರದ ನಾಯಕರು ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವ ಮುಂದಿಟ್ಟಿದ್ದರು ಎಂದು ವರದಿಯಾಗಿತ್ತು.
ಆದರೆ ಈಗ ಸಂಘದ ನಾಯಕರು ಯಡಿಯೂರಪ್ಪನವರ ಪರ ವಾದ ಮಂಡಿಸಿದ್ದರೇ ಹೊರತು, ಯಡಿಯೂರಪ್ಪನವರನ್ನು ಬದಲಾಯಿಸಿ ಎಂದು ಹೇಳಿರಲಿಲ್ಲ. ಜತೆಗೆ ಯಡಿಯೂರಪ್ಪನವರನ್ನು ಬದಲಾಯಿಸದಂತೆ ಅಮಿತ್ ಶಾಗೆ ಕಿವಿ ಮಾತು ಹೇಳಿದ್ದರು ಎಂದು ಹೇಳಲಾಗಿದೆ.
ಮುಂದಿನ ಲೋಕಸಭಾ ಚುನಾವಣೆಗಳು ಬಿಜೆಪಿಗೆ ಮಹತ್ವದ್ದಾಗಿದೆ. ಯಡಿಯೂರಪ್ಪನವರ ನಾಯಕತ್ವ ಇಲ್ಲದಿದ್ದರೆ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಕಷ್ಟ. ಅವರ ನಾಯಕತ್ವದಲ್ಲೇ ಲೋಕಸಭಾ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಲಿಂಗಾಯತರು ಯಡಿಯೂರಪ್ಪನವರ ಬೆನ್ನಿಗೆ ನಿಂತಿದ್ದಾರೆ. ಲಿಂಗಾಯತ ಸಮುದಾಯ ಬಿಜೆಪಿಯ ವೋಟ್ ಬ್ಯಾಂಕ್ ಆಗಿದೆ. ಹೀಗಿರುವಾಗ ಯಡಿಯೂರಪ್ಪನವರನ್ನು ಬದಲಾಯಿಸಿದರೆ ಅದು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎನ್ನುವ ಆತಂಕ ವರಿಷ್ಠರದ್ದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/09/bjp-lotus.jpg.image_.784.410.gif)