ತುಮಕೂರು

ತುಮಕೂರು ತಾಲ್ಲೂಕು ಗ್ರಾ.ಪಂ. ವ್ಯಾಪ್ತಿಯ “ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ” ಸದಸ್ಯರುಗಳಿಗೆ ಸಾಮರ್ಥ್ಯಾ ಭಿವೃದ್ಧಿ ತರಬೇತಿ ಕಾರ್ಯಕ್ರಮ ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಒಂದು ದಿನದ ಈ ತರಬೇತಿ ಕಾರ್ಯಕ್ರಮ ಆಯೋಜಿತವಾಗಿತ್ತ್ತು.
ತುಮಕೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಈ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಯೊಬ್ಬರೂ ಈ ಶಿಬಿರದ ಪ್ರಯೋಜನ ಪಡೆದು, ಆಯಾ ಗ್ರಾಮಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಮನವಿ ಮಾಡಿಕೊಂಡರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ಆಡಳಿತಾಧಿಕಾರಿ ಆದಿಲಕ್ಷ್ಮಮ್ಮ ಹಾಗೂ ಸಂಪನ್ಮೂಲ ವ್ಯಕ್ತಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತುಮಕೂರು ತಾಲ್ಲೂಕಿನ ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ.ಗಳು, ವಾಟರ್ಮನ್ಗಳು ಮತ್ತಿತರ ಆಹ್ವಾನಿತರು ಇದರಲ್ಲಿ ಭಾಗವಹಿಸಿದ್ದರು.
ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ನಂತರ ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಸಾಧಿಸಿದ ಪ್ರಗತಿ ಮತ್ತು ವೈಫಲ್ಯಗಳ ಬಗ್ಗೆ, ಸಮಿತಿ ರಚನೆ ಮತ್ತು ಸದಸ್ಯರಾಗಿ ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ, ರಾಜ್ಯದ ವಿವಿಧೆಡೆ ಈ ಸಮಿತಿಗಳು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಬಗ್ಗೆ, ಕುಡಿಯುವ ನೀರು ಸರಬರಾಜು ಯೋಜನೆಗಳ ನಿರ್ವಹಣೆ ಮತ್ತು ಗುಣಮಟ್ಟ ಪರಿಶೀಲನೆ ಬಗ್ಗೆ ತಾಂತ್ರಿಕ ಮಾಹಿತಿ – ಈ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ವಿವಿಧ ಗೋಷ್ಠಿಗಳಲ್ಲಿ ಸವಿವರವಾದ ಮಾಹಿತಿ ನೀಡಿ, ಸಮಿತಿ ಸದಸ್ಯರುಗಳೊಂದಿಗೆ ಚರ್ಚಿಸಿದರು. ಸಂಜೆ ಸಮಾರೋಪ ಸಮಾರಂಭ ನಡೆಯಿತು.
