ಚಿತ್ರದುರ್ಗ:
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಬಸ್ಪಾಸ್ ನೀಡಬೇಕೆಂದು ಒತ್ತಾಯಿಸಿ ಎ.ಬಿ.ವಿ.ಪಿ.ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮದಕರಿ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿದ್ದ ವಿದ್ಯಾರ್ಥಿಗಳು ಗಾಂಧಿವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು. ಬಡವ-ಶ್ರೀಮಂತ ಯಾವುದೇ ಜಾತಿ ತಾರತಮ್ಯವಿಲ್ಲದೆ ಶಿಕ್ಷಣ ಎಲ್ಲರಿಗೂ ಸಿಗಬೇಕು. 2018-19 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಎಸ್.ಸಿ., ಎಸ್ಟಿ ಸೇರಿದಂತೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿತ್ತು.
ಅದರೆ ಇದುವರೆವಿಗೂ ಜಾರಿಗೆ ಬಂದಿಲ್ಲ. ಗ್ರಾಮೀಣ ಪ್ರದೇಶದಿಂದ ನಗರ ಪಟ್ಟಣಗಳಿಗೆ ದಿನನಿತ್ಯವೂ ಬಂದು ಶಿಕ್ಷಣ ಪಡೆಯುವುದು ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಶಿಕ್ಷಣ ವ್ಯಾಪಾರೀಕರಣವಾಗಿರುವುದು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೆ ಬಸ್ಪಾಸ್ ವಿತರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
ಎ.ಬಿ.ವಿ.ಪಿ.ನಗರ ಕಾರ್ಯದರ್ಶಿ ಸತೀಶ್ ಭಗತ್, ಸುಚಿತ್ರ, ಚಂದ್ರು, ರಾಜು, ಶಿವು, ಗಿರಿ, ಪಿ.ಎಂ.ಗುರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
