ಕೊಪ್ಪಳ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಶಕ್ತಿಯಿದ್ದರೆ ಈ ವಿಧಾನಸಭೆಯನ್ನು ವಿಸರ್ಜಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ನಡುವೆ ಸುಳ್ಳುಗಳನ್ನು ಹರಡುವ ಸುಳ್ಳಿನ ರಾಜಕಾರಣ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಶ್ವತವಾಗಿ ವಿರೋಧ ಪಕ್ಷದಲ್ಲಿರುತ್ತೆ ಎಂದು ಹೇಳಿಕೆ ನೀಡುತ್ತಾರೆ. ಬಿಜೆಪಿಯವರಿಗೆ ತಾಕತ್ ಇದ್ರೆ ವಿಧಾನಸಭೆಯನ್ನು ವಿಸರ್ಜನೆ ಮಾಡಲಿ ಎಂದರು.
ರಾಜ್ಯ ಸರ್ಕಾರದ ನೆರೆ ಪರಿಹಾರ ಕಾರ್ಯದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಪ್ರವಾಹದಿಂದ 22 ಜಿಲ್ಲೆಗಳ 103 ತಾಲೂಕಿನ ಜನ ತತ್ತರಿಸಿದ್ದಾರೆ. 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 115 ಜನ ಮಳೆಯಿಂದ ಸಾವನ್ನಪ್ಪಿದ್ದಾರೆ. ಪ್ರವಾಹದಿಂದ 1 ಲಕ್ಷ ಕೋಟಿ ನಷ್ಟ ಉಂಟಾಗಿದೆ. ಆದರೆ, ಕೇಂದ್ರದಿಂದ ಈವರೆಗೆ 1,200 ಕೋಟಿ ಮಾತ್ರ ಪರಿಹಾರ ಹಣ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನೂ ರಾಜ್ಯದಲ್ಲೂ ಬಿಜೆಪಿ ನಾಯಕರು ಅಧಿಕಾರ ಉಳಿಸಿಕೊಳ್ಳುವ ಜಂಜಾಟದಲ್ಲಿದ್ದು ನೆರೆ ಪರಿಹಾರಕ್ಕೆ ಮನಸ್ಸು ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರಕ್ಕೆ ನಿಜಕ್ಕೂ ರೈತರ ಮೇಲೆ ಕಾಳಜಿ ಇದ್ದರೆ ರಾಷ್ಟ್ರೀಯ ಮತ್ತು ಸಹಕಾರ ಬ್ಯಾಂಕ್ನಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲಿ ಎಂದು ಒತ್ತಾಯಿಸಿದ್ದಾರೆ.ಅಲ್ಲದೆ, ಟಿಪ್ಪು ಜಯಂತಿಯನ್ನು ಬಿಜೆಪಿ ವಿವಾದಾತ್ಮಕ ವಿಚಾರ ವನ್ನಾಗಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದಾಗ ಟಿಪ್ಪು ಸುಲ್ತಾನ್ ಕುರಿತು ಹಾಡಿ ಹೊಗಳಿದ್ದರು.
ಸಿಎಂ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದ್ದಾಗಲೂ ಟಿಪ್ಪು ಗುಣಗಾನ ಮಾಡಿದ್ದರು. ಆದರೆ, ಇದೀಗ ಟಿಪ್ಪು ಜಯಂತಿಯನ್ನು ಮುಂದಿಟ್ಟು ಗೋಸುಂಬಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/10/V-S-Ugrappa-DH-1569323967.gif)