ಬೆಂಗಳೂರು:
ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು.
ಆದರೆ ವಿದ್ಯಾಗಮ ಕಾರ್ಯಕ್ರಮ ಆರಂಭವಾದ ನಂತರ ಹಲವು ಮಕ್ಕಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು ತಗಲಿದೆ, ಇದರಿಂದ ಮಕ್ಕಳು ಮತ್ತು ಶಿಕ್ಷಕರ ಜೀವಕ್ಕೆ ಅಪಾಯವಾಗುತ್ತಿದೆ ಎಂದು ರಾಜ್ಯದ ಹಲವು ಜಿಲ್ಲೆಗಳಿಂದ ವ್ಯಾಪಕವಾದ ದೂರು ಬಂದ ಹಿನ್ನೆಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ತಿಳಿಸಿದ್ದಾರೆ.
