ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚು

ದಾವಣಗೆರೆ:

           ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಅಭಿವೃದ್ಧಿ ಹೊಂದಿದ ದೇಶಗಳೇ ಮುಂಚೂಣಿಯಲ್ಲಿವೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯ ಕುಲಪತಿ ಡಾ.ಪಿ.ವಿ.ಕೃಷ್ಣಭಟ್ ತಿಳಿಸಿದರು.

         ಗುರುವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಏರ್ಪಡಿಸಿದ್ದ “ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಮಾನವ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಾಮರ್ಶೆ’’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

         ಪ್ರಸ್ತುತ ಜಗತ್ತಿನಲ್ಲಿ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಆದರೆ, ಅಭಿವೃದ್ಧಿ ಹೊಂದಿದ ದೇಶಗಳೇ ಇಂದು ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಮೊದಲ ಸ್ಥಾನದಲ್ಲಿವೆ ಎಂದರು.ಪ್ರಕೃತಿಯನ್ನು ಇನ್ನಿಲ್ಲದಂತೆ ಬರಿದಾಗಿಸುವ ಪ್ರಯತ್ನ ಅಭಿವೃದ್ಧಿ ಹೊಂದಿದ ದೇಶಗಳಿಂದ ಆಗುತ್ತಿದೆ. ಕೇವಲ ಮಾನವರ ಮೇಲೆ ಮಾತ್ರವಲ್ಲದೇ ಪರಿಸರದ ಮೇಲೆ ನಡೆಯುತ್ತಿರುವ ನಿರಂತರ ಆಕ್ರಮಣಗಳು ಪ್ರಕೃತಿಯ ಹಕ್ಕುಗಳ ಉಲ್ಲಂಘನೆಗೂ ಕಾರಣವಾಗುತ್ತಿವೆ ಎಂದು ವಿಷಾಧಿಸಿದರು.

       ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮಾನವನ ಹಕ್ಕುಗಳ ರಕ್ಷಣೆಯ ಜತೆಗೆ ಪ್ರಕೃತಿಯ ಸಂರಕ್ಷಣೆಯ ಹಕ್ಕುಗಳು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕಾಗಿದೆ. ಪ್ರಕೃತಿ ಆರಾಧಿಸುವ ಗುಣವನ್ನು ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟ ಕೀರ್ತಿ ಭಾರತದ ಸಂಸ್ಕತಿಗೆ ಸಲ್ಲುತ್ತದೆ. ಭಾರತ ದೇಶದಲ್ಲಿ ಮಾನವ ಹಕ್ಕುಗಳು ಮಾತ್ರವಲ್ಲದೆ ಜೀವಿಗಳ ಹಕ್ಕನ್ನು ಸಂರಕ್ಷಿಸುವಂತಹ ಸಂಸ್ಕ್ರತಿ ಬೆಳೆದು ಬಂದಿದೆ. ಆದ್ದರಿಂದ ಮಾನವೀಯ ಮೌಲ್ಯಗಳೊಂದಿಗೆ ಪ್ರಕೃತಿಯ ಮಾಲ್ಯಗಳನ್ನು ಮುಂದಿನ ಭವಿಷ್ಯಕ್ಕೆ ತಲುಪಿಸುವ ಹೊಣೆಗಾರಿಕೆ ಯುವ ಪೀಳಿಗೆಯ ಮೇಲಿದೆ ಎಂದರು.

          ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ್ ಹೊಸಳ್ಳಿ ಮಾತನಾಡಿ, ಮಾನವ ಹಕ್ಕುಗಳ ಬಗೆಗಿನ ಪರಿಕಲ್ಪನೆ ಹಾಗೂ ಆಳವಾದ ಮಾಹಿತಿ ಕೊರತೆ ಇಂದು ಯುವಜನತೆಯಲ್ಲಿ ಎದ್ದು ಕಾಣುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

          ಸಂವಿಧಾನದಲ್ಲಿ ಅಶಕ್ತರನ್ನು ಶಕ್ತರನ್ನಾಗಿ ಮಾಡಲು ರೂಪಿಸಿದ ಕಾನೂನುಗಳು ಇಂದು ದುರ್ಬಳಕೆ ಆಗುತ್ತಿವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಪ್ರಯತ್ನವಾಗಬೇಕು. ಭಾರತದ ಸಂವಿಧಾನದಲ್ಲಿನ ಅನೇಕ ಆಶಯಗಳನ್ನು ಇಂದು ಇತರೆ ದೇಶಗಳು ಬಳಸಿಕೊಳ್ಳುತ್ತಿವೆ. ಅಂತಹ ಉತ್ತಮ ಸಂವಿಧಾನದಲ್ಲಿ ನೀಡಲಾಗಿರುವ ಮಾನವೀಯ ಮೌಲ್ಯಗಳ ಬಗ್ಗೆ ಯುವಜನತೆ ತಿಳಿದುಕೊಳ್ಳಬೇಕೆಂದು ಸಲಹೆ ನೀಡಿದರು.

         ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ವಿ.ಹಲಸೆ ಮಾತನಾಡಿ, ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು. ಮಾನವ ತನ್ನ ವರ್ತನೆ ಹೇಗಿರಬೇಕು ಎಂಬುದನ್ನು ಅರಿತು ನಡೆದರೆ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ. ಭಾರತದ ಸಂವಿಧಾನವೇ ಒಂದು ರೀತಿಯ ದಿಕ್ಸೂಚಿ ಇದ್ದಂತೆ. ಸಂವಿಧಾನವನ್ನು ಸಮರ್ಪಕವಾಗಿ ಅಧ್ಯಯನ ಮಾಡುವ ಮೂಲಕ ಯುವಜನತೆ ಸಮಾಜದಲ್ಲಿ ಮಾನವ ಹಕ್ಕುಗಳ ಮಹತ್ವವನ್ನು ಅರಿಯಲು ಪ್ರಯತ್ನಿಸಬೇಕು ಎಂದರು.

            ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಪಿ.ಕಣ್ಣನ್, ಪರೀಕ್ಷಾಂಗ ಕುಲಸಚಿವ ಪ್ರೊ. ಬಸವರಾಜ್ ಬಣಕಾರ್, ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಪ್ರೊ.ಕೆ.ಬಿ. ರಂಗಪ್ಪ ಮತ್ತು ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಿ.ಎಸ್.ಪ್ರದೀಪ್ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link