ಬೆಂಗಳೂರು:
ಶ್ರವಣ ದೋಷವುಳ್ಳವರ ಶ್ರೇಯೋಭಿವೃದ್ಧಿಗಾಗಿ ಕಿವುಡರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಎಂದು ಕಿವುಡರ ಸಂಘವು ಒತ್ತಾಯಿಸಿದೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಕಿವುಡರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಕಾಯಕರ್ತರು ಶ್ರವಣದೋಷಯುಳ್ಳವರು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಿವುಡರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪಿಸಲು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಘದ ಅಧ್ಯಕ್ಷ ಕೆ.ಹೆಚ್.ಶಂಕರ್ ಅವರು ಎಸ್ಎಸ್ಎಲ್ಸಿ ಪದವಿ ಸೇರಿದಂತೆ ಉನ್ನತ ಶಿಕ್ಷಣ ಪಡೆದುಕೊಂಡಿರುವ ನೂರಾರು ಶ್ರವಣ ದೋಷವುಳ್ಳವರು ನಿರುದ್ಯೋಗಿಗಳಾಗಿ ಕೆಲಸವಿಲ್ಲದೆ, ಜೀವನ ನಡೆಸುತ್ತಿದ್ದಾರೆ. ಹೀಗಾಗಿ, ಸರ್ಕಾರಿ ಕಚೇರಿಗಳು ಮಾತ್ರವಲ್ಲದೆ ಖಾಸಗಿ ಉದ್ದಿಮೆಗಳಲ್ಲೂ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಮೀಸಲಿಡುವಂತೆ ಚರ್ಚಿಸಿ, ಆದೇಶಿಸಬೇಕು ಎಂದು ಆಗ್ರಹಿಸಿದರು.
ಅಂಗವಿಕಲ ದಂಪತಿಗಳಿಗೆ ನೀಡುತ್ತಿರುವ ವಿವಾಹ ಪ್ರೊತ್ಸಾಹ ಧನವನ್ನು ಶ್ರವಣಮಾಂದ್ಯ ದಂಪತಿಗೂ ವಿಸ್ತರಿಸಬೇಕು ಹಾಗೂ ಅವಿವಾಹಿತ ಶ್ರವಣ ಮಾಂದ್ಯರಿಗೂ ಇಂತಹ ಸೌಲಭ್ಯ ನೀಡಬೇಕು. ಅವರಿಗೆ ನೀಡುವ ಪಿಂಚಣಿ ಹಣವನ್ನು ಬ್ಯಾಂಕ್ನ ಖಾತೆಗೆ ನೇರವಾಗಿ ಜಮಾ ಮಾಡುವ ಸೌಲಭ್ಯ ಕಲ್ಪಿಸಬೇಕು. ಅಂಗವಿಕಲ ಮೀಸಲಾತಿ ಅನುಪಾತ ಶೇ.3ರಷ್ಟಿದ್ದು, ಈ ಮೀಸಲಾತಿಯಿಂದ ಯಾವುದೇ ಪ್ರಯೋಜನವಿಲ್ಲ. ಮೀಸಲಾತಿಯಲ್ಲಿ ಸಾಕಷ್ಟು ಅನ್ಯಾಯ ಆಗುತ್ತಿದ್ದು, ಅದನ್ನು ತಡೆಗಟ್ಟಬೇಕು ಹಾಗೂ ಮೀಸಲಾತಿಯನ್ನು ಶೇ.20ಕ್ಕೆ ಹೆಚ್ಚಿಸಬೇಕು. ವಯೋಮಿತಿಯನ್ನು 45 ವರ್ಷಕ್ಕೆ ಹೆಚ್ಚಿಸಬೇಕು ಎಂದರು.
ಶ್ರವಣದೋಷವುಳ್ಳ ಮಕ್ಕಳಿಗೆ ಶಾಲಾ ಕಾಲೇಜುಗಳಲ್ಲಿ ಸನ್ನೆಯಿಂದ ಪಾಠ ಮಾಡಬೇಕು. ಆದರೆ, ಆ ರೀತಿ ಕೆಲಸ ಮಾಡುವ ಶಿಕ್ಷಕರ ಸಂಖ್ಯೆ ಕಡಿಮೆ ಇದೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಹಾಗೂ ಈ ಮೂಲಕ ಶಿಕ್ಷಕರ ಕೊರತೆ ನೀಗಿಸಬೇಕು. ಈ ಮೂಲಕ ಮಕ್ಕಳು ವಿದ್ಯೆಯಿಂದ ವಂಚಿತರಾಗುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ಸಂಘದ ಮುಖಂಡರು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








