ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು

ಚಿತ್ರದುರ್ಗ:

      ಜಿಲ್ಲೆಯಲ್ಲಿ ಅರ್ಹ ವಯಸ್ಸಿನ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಸರ್ಕಾರಿ ಶಾಲೆಗಳಲ್ಲಿ ಓದಿ, ಸಾಧನೆ ಮಾಡಿದ ಸಾಧಕರ ಕುರಿತು ಪರಿಚಯಿಸುವ ಮೂಲಕ ಮಕ್ಕಳು ಶಾಲೆಗೆ ದಾಖಲಾಗುವಂತೆ ಶಿಕ್ಷಕರು, ಅಧಿಕಾರಿಗಳು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಪ್ರಸಕ್ತ ಸಾಲಿನ ವಿಶೇಷ ದಾಖಲಾತಿ ಆಂದೋಲನ ಕುರಿತು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಪದೇ ಪದೇ ಬರಕ್ಕೆ ತುತ್ತಾಗುವ ಚಿತ್ರದುರ್ಗ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿ ಹಿಂದಿದೆ. ಶಿಕ್ಷಣದಲ್ಲಿ ಉತ್ತಮ ಸಾಧನೆ ತೋರಲು ಅವಕಾಶಗಳಿವೆ. ಹೀಗಾಗಿ ಜಿಲ್ಲೆಯಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಶಿಕ್ಷಕರು, ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕಿದೆ.

      ಸಕಾರದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಉಪಹಾರ, ಕ್ಷೀರಭಾಗ್ಯ, ಸಮವಸ್ತ್ರ, ಪಠ್ಯಪುಸ್ತಕ, ಬೈಸಿಕಲ್, ವಿದ್ಯಾರ್ಥಿ ವೇತನ ಮುಂತಾದ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ನೀಡಲಾಗುತ್ತಿದೆ. ಸರ್ಕಾರದ ಈ ಯೋಜನೆಗಳ ಕುರಿತು ಮಕ್ಕಳ ಪೋಷಕರು, ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದಿರುವ ಸಾಧಕರ ಪರಿಚಯ ಮಾಡಿಕೊಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದರು.

     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಜಿಲ್ಲೆ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಕಂದಾಚಾರ, ಮೌಢ್ಯಗಳು ಹೆಚ್ಚು ಬೇರೂರಿದ್ದು, ಮಕ್ಕಳನ್ನು ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಸುಲಭವಾಗಿ ಒಪ್ಪುವುದಿಲ್ಲ.

      ಇಂತಹ ಪ್ರದೇಶಗಳಿಗೆ ಶಿಕ್ಷಕರು, ಅಧಿಕಾರಿಗಳು ಭೇಟಿ ನೀಡಿ, ಜನರಲ್ಲಿ ಜಾಗೃತಿ ಮೂಡಿಸಿ, ಅವರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವಲ್ಲಿ ಮುಂದಾಗಬೇಕು. ಶಾಲೆಗೆ ದಾಖಲಿಸಲು ಅರ್ಹರಿರುವ ಮಕ್ಕಳ ಪಟ್ಟಿಯನ್ನು ಅಂಗನವಾಡಿಗಳಿಂದ, ಆಯಾ ಮುಖ್ಯ ಶಿಕ್ಷಕರು ಪಡೆದು, ಎಲ್ಲ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳಬೇಕು.

        ಒಂದು ವೇಳೆ ಗ್ರಾಮದಲ್ಲಿ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ, ಅಂತಹ ಮಕ್ಕಳ ಮನೆಗೆ ಎಸ್‍ಡಿಎಂಸಿಯವರು, ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಸ್ಥಳೀಯ ಯುವಕ/ಯುವತಿ ಮಂಡಳಿಯ ಸದಸ್ಯರ ನೆರವಿನೊಂದಿಗೆ ಮನೆಗಳಿಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ, ಶಾಲೆಗೆ ದಾಖಲಿಸಬೇಕು. ಇಂತಹ ಮಕ್ಕಳು ಶಾಲೆಗೆ ದಾಖಲಾದ ನಂತರ ನಿಯಮಿತವಾಗಿ ಶಾಲೆಗೆ ಹಾಜರಾಗುತ್ತಿರುವ ಬಗ್ಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

       ಸಭೆಯಲ್ಲಿ ಡಿಡಿಪಿಐ ಎ.ಜೆ. ಅಂಥೋನಿ, ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎ.ಕೆ. ಕೆಂಗಪ್ಪ, ತಿಪ್ಪೇಸ್ವಾಮಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಆರೋಗ್ಯ, ಕಾರ್ಮಿಕ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link