ಹುಳಿಯಾರು
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ನ.7 ರಂದು ಬೆಂಗಳೂರಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ತಿಳಿಸಿದ್ದಾರೆ.
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಈ ಹಿಂದೆ ರೈತಸಂಘ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದಾಗ ಹದಿನೈದು ದಿನದಲ್ಲಿ ಸೂಕ್ತ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಭರವಸೆ ಈಡೇರಿಲ್ಲ. ಇದಕ್ಕಾಗಿ ಮುಖ್ಯಮಂತ್ರಿ ಮನೆ ಮುತ್ತಿಗೆ ಕರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಮಹಾರಾಷ್ಟçದ ಚುನಾವಣಾ ಪ್ರಚಾರಕ್ಕೆ ಹೋಗಲು, ಅನರ್ಹ ಶಾಸಕರ ರಕ್ಷಣೆಗೆ ನಿಲ್ಲಲು ಸಮಯವಿದೆ. ಅಲ್ಲದೆ ಅನರ್ಹ ಶಾಸಕರ ಕ್ಷೇತ್ರಗಳ ಮರುಚುನಾವಣಾ ಪ್ರಚಾರಕ್ಕೆ ಹೋಗುವುದು, ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಾವಿರಾರೂ ಕೋಟಿ ರೂ. ಅನುದಾನ ಕೊಡುವುದು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿದೆ. ನೆರೆ ಸಂತ್ರಸ್ತರ ಬಳಿಗೆ ಹೋಗುವುದು, ಅವರಿಗೆ ಪರಿಹಾರ ಕೊಡಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ನೆರೆಯಿಂದ ಬೆಳೆಹಾನಿಯಾದ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು, ಸಂಪೂರ್ಣ ಮನೆ ಕಳೆದುಕೊಂಡವರಿಗೆ ತಲಾ 10 ಲಕ್ಷ ರೂ. ನೀಡಬೇಕು, ಪ್ರತಿ ವರ್ಷ ನೆರೆ ಹಾನಿಗೊಳಗಾಗುವ ಹಳ್ಳಿ ಸ್ಥಳಾಂತರಿಸಬೇಕು, 60 ವರ್ಷದ ರೈತರಿಗೆ ಪ್ರತಿ ತಿಂಗಳು 5000 ರೂ. ಮಾಸಾಶನ ನೀಡುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಈ ಸಂದರ್ಭ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ನವೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆವರೆಗೆ ಮೆರವಣಿಗೆ ನಡೆಸಲಾಗುವುದು. ರಾಜ್ಯದ ರೈತರು, ಕೃಷಿ ಕಾರ್ಮಿಕರು, ಸಂತ್ರಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
