ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ

ತುರುವೇಕೆರೆ

     ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಲ್ಲೂಕಿನ ಕನ್ನಡ ಪರ ಸಂಘಟನೆಗಳ ಸಹಕಾರ ಪಡೆಯುವುದು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯೊಂದಿಗೆ ಈ ಬಾರಿ ನಾಡಹಬ್ಬವನ್ನು ಆಚರಿಸೋಣ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.

     ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಹಾಗೂ ಪಟ್ಟಣ ಪಂಚಾಯ್ತಿ ಹಾಗೂ ಅನೇಕ ಸಂಘಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ ಒಂದರಂದು ನಡೆಯುವ ನಾಡಹಬ್ಬಕ್ಕೆ ಇಲಾಖಾಧಿಕಾರಿಗಳಿಗೆ ವಹಿಸಿರುವ ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕರೆ ನೀಡಿದರು.

       ಪಟ್ಟಣದ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಈ ಬಾರಿ ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರ ಮುಂಭಾಗ ನಾಡಹಬ್ಬವನ್ನು ಆಚರಿಸಲು ತೀರ್ಮಾನಿಸಲಾಯಿತು.

      ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ದಂಡಾಧಿಕಾರಿ ನಾಗರಾಜು ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸಂದೇಶ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎ.ಎಸ್.ಮಸಾಲಜಯರಾಂ ವಹಿಸಲಿದ್ದು, ಸಮಾರಂಭದಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

      ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 5 ಸಾಧಕರಿಗೆ ಸನ್ಮಾನ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಈ ಬಾರಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆದು ಆಯ್ದ ಮಕ್ಕಳಿಗೆ ಬಹುಮಾನ ವಿತರಣೆ, ಸಿಹಿ ಹಂಚಿಕೆ ಸೇರಿದಂತೆ ಜವಾಬ್ದಾರಿ ವಹಿಸಿಕೊಂಡ ಆಯಾ ಇಲಾಖಾಧಿಕಾರಿಗಳು ಶ್ರದ್ದೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಲಾಯಿತು.

      ಕಾರ್ಯಕ್ರಮದ ತರುವಾಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸ್ಥಬ್ದ ಚಿತ್ರಗಳ ಮೆರವಣಿಗೆ, ಸಂಜೆ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ನಾಡಹಬ್ಬದ ಅಂಗವಾಗಿ ಪಟ್ಟಣದ ಶಾಲಾ ಮಕ್ಕಳಿಂದ ನಾಡಗೀತೆಗಳಿಗೆ ಸಂಬಂಧಿಸಿದಂತೆ ಸಾಂಸ್ಕತಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಿ ಅಂದು ಎಲ್ಲರೂ ಪಾಲ್ಗೊಂಡು ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸೂಚಿಸಲಾಯಿತು.

       ಪೂರ್ವಭಾವಿ ಸಭೆಗೆ ಹಾಗೂ ಕಾರ್ಯಕ್ರಮದಂದು ಅನೇಕ ಇಲಾಖಾಧಿಕಾರಿಗಳು ಗೈರುಹಾಜರಾಗುವ ಬಗ್ಗೆ ಕ.ಸಾ.ಪ. ಗೌರವಾಧ್ಯಕ್ಷ ಪುಟ್ಟರಂಗಪ್ಪ ಶಾಸಕರ ಗಮನಕ್ಕೆ ತಂದ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ನಾಡಹಬ್ಬ ಕಾರ್ಯಕ್ರಮಕ್ಕೆ ಶಿಕ್ಷಕರಾದಿಯಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಾಗುವಂತೆ ಸೂಚಿಸುವುದು ಹಾಗೂ ಗೈರುಹಾಜರಾದವರ ಬಗ್ಗೆ ತಹಸೀಲ್ದಾರ್ ಹಾಗೂ ಬಿಇಓ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಖಡಕ್ಕಾಗಿ ಸೂಚಿಸಿದರು.

        ಸಭೆಯಲ್ಲಿ ತಹಸೀಲ್ದಾರ್ ನಾಗರಾಜು, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ಪ.ಪಂ.ಅಧ್ಯಕ್ಷ ಲಕ್ಷ್ಮೀನರಸಿಂಹ, ಮುಖ್ಯಾಧಿಕಾರಿ ಮಂಜುಳಾದೇವಿ, ಕ.ಸಾ.ಪ. ಅಧ್ಯಕ್ಷ ನಂ.ರಾಜು, ಮುಖಂಡ ಕಡೆಹಳ್ಳಿ ಸಿದ್ದೇಗೌಡ, ನೌಕರರ ಸಂಘದ ಪ್ರಹ್ಲಾದ್, ಸಾ.ಶಿ.ದೇವರಾಜು, ಬೆಸ್ಕಾಂ ಮಾರುತಿ, ಇಲಾಖಾಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರೆ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link