ಚಿತ್ರದುರ್ಗ;
ಚಿತ್ರದುರ್ಗ ಜಿಲ್ಲೆಯಲ್ಲಿ ಯಾವುದೇ ಕೈಗಾರಿಕೆಗಳಿಲ್ಲ, ನೀರಾವರಿ ಸೌಲಭ್ಯಗಳಿಲ್ಲದೆ ಬಹುತೇಕ ಜನರು ಸರ್ಕಾರದ ಯೋಜನೆಗಳ ಮೇಲೆ ಅವಲಂಭಿತವಾಗಿದ್ದು ಜಿಲ್ಲಾ ಆಡಳಿತ ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತದೆ ಎಂದು ನೂತನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಶನಿವಾರ ಮಧ್ಯಾಹ್ನ 12.45 ಗಂಟೆಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿನಸಮಸ್ಯೆ, ಕೊರತೆಗಳ ಅರಿವಿದ್ದು ವಿದ್ಯಾರ್ಥಿಯಾದಾಗಿನಿಂದಲೂ ಚಿತ್ರದುರ್ಗದ ಸಂಪರ್ಕವಿದೆ. ಆದ್ದರಿಂದ ಇಲ್ಲಿನ ಸಮಸ್ಯೆಗಳು, ಆಗಬೇಕಾದ ಕೆಲಸಗಳನ್ನು ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಮುಂಗಾರು ಕೈಕೊಟ್ಟಿದ್ದರಿಂದ ಬೇಸಿಗೆಯಲ್ಲಿ ಬರುತ್ತಿದ್ದ ಕುಡಿಯುವ ನೀರಿನ ಸಮಸ್ಯೆ ಮಳೆಗಾಲದಲ್ಲಿಯೇ ಆರಂಭವಾಗಿದೆ. ಮತ್ತು ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಉದ್ಯೋಗ ಖಾತರಿಯಡಿ ಉದ್ಯೋಗ ನೀಡಲು ಸಹ ಕ್ರಮ ಕೈಗೊಳ್ಳಲಾಗುತ್ತದೆಯಲ್ಲದೆ ಜಾನುವಾರುಗಳಿಗೆಮೇವು, ನೀರು ಒದಗಿಸಲು ಸಹ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಆರಂಭವಾಗಿರುವ ಕೆಲಸಗಳು, ಯೋಜನೆಗಳ ಪ್ರಗತಿಯ ಮಾಹಿತಿ ಪಡೆದು ಜಿಲ್ಲಾಧಿಕಾರಿಯಾಗಿ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಬೆಳೆ ಸಮೀಕ್ಷೆ ನಡೆಯುತ್ತಿದ್ದು ರೈತರಿಗೆ ಬೆಳೆ ನಷ್ಟದಿಂದ ಬರಬೇಕಾದ ವಿಮಾ ಪರಿಹಾರ ಸೇರಿದಂತೆ ಅಗತ್ಯವಿರುವ ಎಲ್ಲಾ ನೆರವು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲನೆ ಮಾಡಲಾಗುತ್ತದೆ ಎಂದರು.
ಅಕ್ರಮ ಮರಳು ಗಣಿಗಾರಿಕೆ, ಮರಳು ಸಾಗಾಣಿಕೆ ಸಾಕಷ್ಟು ನಡೆಯುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ನಿಯಮಬದ್ದವಾಗಿ ಏನು ಮಾಡಬೇಕು ಎಲ್ಲವನ್ನು ಕಾರ್ಯಗತ ಮಾಡಲಾಗುತ್ತದೆ. ಚೆಕ್ಪೋಸ್ಟ್ ಮತ್ತು ಇದಕ್ಕೆ ಪತ್ಯೇಕ ಪಡೆಯನ್ನು ನೇಮಕ ಮಾಡಲು ಟಾಸ್ಕ್ಪೋರ್ಸ್ನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮ್ಯಾಕಾನಿಕಲ್ ಇಂಜಿನಿಯರಿಂಗ್ನಲ್ಲಿ ಎಂ.ಟೆಕ್ ಸ್ನಾತಕೋತ್ತರ ಪದವೀಧರರಾಗಿರುವ ಆರ್.ಗಿರೀಶ್ರವರು 2010 ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿ ಸೇವೆ ಆರಂಭಿಸಿ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿ ಕೆಲಸ ನಿರ್ವಹಿಸಿ ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೇ ಮೊದಲ ಭಾರಿಗೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ನಮ್ಮ ಪಕ್ಕದ ದಾವಣಗೆರೆ ಜಿಲ್ಲೆಯ ನಿವಾಸಿಯಾಗಿದ್ದಾರೆ.
ಈ ಹಿಂದಿನ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ರವರು ಉಪಸ್ಥಿತರಿದ್ದು ಪ್ರಭಾರ ಹಸ್ತಾಂತರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
