ಬೆಂಗಳೂರು
ಲೋಕಸಭಾ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್ ಬೆಂಗಳೂರಿನ ಮೂರು ಕ್ಷೇತ್ರಗಳತ್ತ ಚಿತ್ತ ಹರಿಸಿದೆ. ಈಗಾಗಲೇ ಬೆಂಗಳೂರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ದೇವೇಗೌಡ ಅವರು ಉತ್ತರ ಕ್ಷೇತ್ರವೂ ಸೇರಿದಂತೆ ನಗರದ ಮೂರು ಕ್ಷೇತ್ರಗಳನ್ನು ಬಲಗೊಳಿಸಲು ಯೋಜನೆ ರೂಪಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪ್ರಬಲವಾಗಿರುವ ಬೆಂಗಳೂರಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸಲು ಜೆಡಿಎಸ್ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ.
ನಗರದ ಜೆ.ಪಿ.ಭವನದಲ್ಲಿ ಇಂದು ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಬೆಂಗಳೂರು ಮೂರು ಲೋಕಸಭೆ ಕ್ಷೇತ್ರಗಳ ಮುಖಂಡರ ಜತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ದೇವೇಗೌಡರು, ಬೆಂಗಳೂರು ನಗರ ಲೋಕಸಭೆ ಕ್ಷೇತ್ರಗಳ ಬಗ್ಗೆ ಸಭೆ ನಡೆಲಾಗಿದ್ದು, 28 ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಗ್ಗೆ ಒತ್ತು ನೀಡಲು ಚಿಂತನೆ ನಡೆಸಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ‘ಬಡವರ ಬಂಧು’ ಕಾರ್ಯಕ್ರಮ ಜಾರಿಗೆ ತಂದು ಬಡವರಿಗೆ ಬಡ್ಡಿರಹಿತ ಸಾಲ ನೀಡಿದ್ದಾರೆ.’ಕಾಯಕ’ ಯೋಜನೆ ಮೂಲಕ ಸ್ತ್ರಿಶಕ್ತಿ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಾಲಮನ್ನಾ ಮಾಡಿದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಈ ಹಿಂದೆ ಜೆಡಿಎಸ್ ಪ್ರಬಲವಾಗಿತ್ತು.8 ವರ್ಷಗಳ ಕಾಲ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಪಕ್ಷ ಆಡಳಿತ ನಡೆಸಿತ್ತು ಎಂಬುದನ್ನು ಸ್ಮರಿಸಿದ ಅವರು, ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸಿದರೂ ಪಕ್ಷವನ್ನು ಇನ್ನಷ್ಟು ಸಂಘಟಿಸಬೇಕಿದೆ. ಈ ಬಗ್ಗೆ ಪಕ್ಷದ ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದರು.
ಪಕ್ಷ ಸಂಘಟನೆಗಾಗಿ ಒಂದೊಂದು ಲೋಕಸಭೆ ಕ್ಷೇತ್ರಕ್ಕೆ ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುವುದು.ಕಾರ್ಯಾಧ್ಯಕ್ಷರ ನೇಮಕಾತಿ ಉಸ್ತುವಾರಿಯನ್ನು ರಾಜ್ಯಸಭೆ ಸದಸ್ಯ ಕುಪ್ಪೇಂದ್ರರೆಡ್ಡಿ ಅವರಿಗೆ ವಹಿಸಲಾಗಿದೆ ಎಂದು ದೇವೇಗೌಡ ಅವರು ತಿಳಿಸಿದರು.
ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್, ಜೆಡಿಎಸ್ ಗೆ ಬಿಟ್ಟು ಕೊಡುವ ಕ್ಷೇತ್ರಗಳ ಯಾವುದು ಎಂಬುದು ಸ್ಪಷ್ಟವಾಗಿಲ್ಲ. ಆದರೂ ಬಿಟ್ಟು ಕೊಡುವ ಕ್ಷೇತ್ರಗಳಲ್ಲಿ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಬೇಕಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎರಡೂ ಪಕ್ಷ ಮೈತ್ರಿ ಮಾಡಿಕೊಳ್ಳದೇ ಏಕಾಂಕಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಚುನಾವಣೆ ಬಳಿಕ ಮೇಯರ್ ಆಯ್ಕೆ ವೇಳೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ಮಾಡಲಾಗುವುದು. ಹಾಸನ ಲೋಕಸಭೆ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ಸ್ಪರ್ಧೆಗೆ ಕಾಂಗ್ರೆಸ್ ಬೆಂಬಲ ಕೇಳಿದ್ದೇವಷ್ಟೆ , ಆದರೆ ಈ ಬಗ್ಗೆ ಸಂಸದೀಯ ಮಂಡಳಿಯಲ್ಲಿ ಇನ್ನೂ ತೀರ್ಮಾನವಾಗಿಲ್ಲ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಚರ್ಚೆ ಅನಗತ್ಯ ಎಂದು ಅವರು ವಿವರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
