ತುಮಕೂರು
2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿದ ತುಮಕೂರು ಕ್ಷೇತ್ರದ ಮಾಜಿ ಸಂಸದ ಮುದ್ದಹನುಮೇಗೌಡ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ. ಇಂತಹ ಸುದ್ದಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿವೆ.
ಜೂನ್ 19ರಂದು ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಆದರೆ, ಅಭ್ಯರ್ಥಿ ಯಾರು? ಎಂಬುದು ಚರ್ಚೆಗೆ ಕಾರಣವಾಗಿದೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಲಿ ಸಂಸದರಾಗಿದ್ದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಕಾರಣ ಮುದ್ದಹನುಮೇಗೌಡರಿಗೆ ತುಮಕೂರಿನಲ್ಲಿ ಟಿಕೆಟ್ ಕೈತಪ್ಪಿತ್ತು. ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್. ಡಿ. ದೇವೇಗೌಡರು ಸೋಲು ಕಂಡಿದ್ದರು.
ಸಂಸದರಾಗಿ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವ ಮುದ್ದಹನುಮೇಗೌಡರು ರಾಜ್ಯಸಭೆ ಪ್ರವೇಶಿಸಲು ಸೂಕ್ತ ಆಯ್ಕೆ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಸಹ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಲಿದೆ? ಎಂಬುದು ಕುತೂಹಲ ಮೂಡಿಸಿದೆ.”ಕೊರೊನಾ ಲಾಕ್ ಡೌನ್ ಪರಿಣಾಮ ದೆಹಲಿಗೆ ಹೋಗಿಲ್ಲ. ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡ ನನಗೆ ರಾಜ್ಯಸಭೆ ಟಿಕೆಟ್ ಕೊಡಬೇಕು. ಈ ಭರವಸೆ ನನಗೆ ಸಿಕ್ಕಿದೆ. ಆಗ ಪಕ್ಷಕ್ಕಾಗಿ ಮಾಡಿದ ತ್ಯಾಗವನ್ನು ನಾನು ಪುನಃ ನಾಯಕರಿಗೆ ನೆನಪಿಸುವ ಅಗತ್ಯವಿಲ್ಲ” ಎಂದು ಮುದ್ದಹನುಮೇಗೌಡರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ