ಹುಳಿಯಾರು
ವಿದ್ಯುತ್ ಏರಿಳಿತದ ಕಷ್ಟ ತಪ್ಪಿಸಿಕೊಳ್ಳಲು ರೈತರು ಕೊಳವೆಬಾವಿಗಳಿಗೆ ಸೋಲಾರ್ ವಿದ್ಯುತ್ ಬಳಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ರೈತ ಸಂಘದಿಂದ (ಪುಟ್ಟಣ್ಣಯ್ಯ ಬಣ) ಪಟ್ಟಣದ ನಾಡಕಚೇರಿ ಮುಂಭಾಗದ ರೈತ ತರಕಾರಿ ಮಾರುಕಟ್ಟೆಯ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ವಿದ್ಯುತ್ ಅಭಾವ ಎದುರಾಗಿದ್ದು, ರಾತ್ರಿ ವೇಳೆ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಂತೂ ವಿದ್ಯುತ್ ಅಭಾವ ಹೆಚ್ಚಾಗಿದೆ. ಬಳಕೆದಾರರ ಸಂಖ್ಯೆ ಹೆಚ್ಚಾದ ಕಾರಣ ರೈತರಿಗೆ ಸಮರ್ಪಕ ವಿದ್ಯುತ್ ನೀಡಲಾಗುತ್ತಿಲ್ಲ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಇನ್ನೂ 5 ವಿದ್ಯುತ್ ಉಪಕೇಂದ್ರಗಳ ಅಗತ್ಯವಿದ್ದು, ಈಗಾಗಲೇ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಿದ್ದೇನೆ. ಇಂತಹ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ರೈತರು ಕೇಂದ್ರ ಸರ್ಕಾರ ನಬಾರ್ಡ್ ಸಹಭಾಗಿತ್ವದಲ್ಲಿ ರಿಯಾಯಿತಿ ದರದಲ್ಲಿ ಸೋಲಾರ್ ವ್ಯವಸ್ಥೆ ಕಲ್ಪಿಸಿದೆ. ಇದರ ಪ್ರಯೋಜನ ಪಡೆಯುವಂತೆ ರೈತರಿಗೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
