ಮಾರ್ಚ್ ಅಂತ್ಯದೊಳಗಾಗಿ ಶೇ.100 ರಷ್ಟು ಗುರಿ ಸಾಧಿಸಿ : ಡಾ.ಎಂ.ವಿ.ವೆಂಕಟೇಶ್

ಹಾವೇರಿ

          ಜಿಲ್ಲೆಯು ಅಭಿವೃದ್ಧಿ ಪಥದತ್ತ ಸಾಗಬೇಕಾದ ಹಿನ್ನೆಲೆಯಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಡಿಯಲ್ಲಿ ಎಲ್ಲ ಇಲಾಖೆಗಳು ಮಾರ್ಚ್ ಅತ್ಯಂದೊಳಗಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಹಾಗೂ ಒಂದು ರೂ. ಸಹ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

          ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರನ್ವಯ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಡಿಯಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಸಕ್ತ ಸಾಲಿನ ಡಿಸೆಂಬರ್ -2018ರವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

         ಕೆಲವು ಇಲಾಖೆಗಳು ಉತ್ತಮ ಸಾಧನೆ ಮಾಡಿದ್ದು, ಇನ್ನೂ ಕೆಲವು ಇಲಾಖೆಗಳು ಸಾಧನೆಯಲ್ಲಿ ಹಿಂದೆ ಇವೆ. ಕೆಲವು ಇಲಾಖೆಗಳಲ್ಲಿ ಕ್ರಿಯಾಯೋಜನೆ ಅನುಮೋದನೆ ಹಾಗೂ ಟೆಂಡರ್ ಪ್ರಕ್ರಿಯೆ ಬಾಕಿ ಇರುವುದಾಗಿ ತಿಳಿದುಬಂದಿದೆ. ಮುಂಬರುವ ದಿನಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಇನ್ನು 15 ದಿನದೊಳಗಾಗಿ ಟೆಂಡರ್ ಪ್ರಕ್ರಿಯೆ ಮುಗಿಸಿ, ಶೀಘ್ರವಾಗಿ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಫಲಾನುಭವಿಗಳಿಗೆ ಉಪಕರಣ ವಿತರಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ತರಾತುರಿಯಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸುವ ನೆಪದಲ್ಲಿ ಕಳಪೆ ಸಾಮಗ್ರಿಗಳನ್ನು ವಿತರಣೆ ಮಾಡಕೂಡದು. ಗುಣಮಟ್ಟದ ವಸ್ತುಗಳ ವಿತರಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

        ಕಾಗಿನೆಲೆಯಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜನರು ವಾರಗಟ್ಟಲೆ ಬರುವಂತಾಗಬೇಕು. ಲಭ್ಯವಿರುವ ಸ್ಥಳದಲ್ಲಿ ಧನ್ವಂತರಿ ವನ, ಔಷಧ ಸಸ್ಯಗಳನ್ನು ಬೆಳೆಸುವ ಮೂಲಕ ಪ್ರಕೃತಿ ಸೌಂದರ್ಯವನ್ನು ಹೆಚ್ಚಿಸುವ ಕೆಲಸವಾಗಬೇಕು ಎಂದು ಆರೋಗ್ಯ ಇಲಾಖೆ ಹಾಗೂ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

         ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಂಗನವಾಡಿಗಳಲ್ಲಿ ಒಂದುಬಾರಿ ಮಾತ್ರ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಇದೇ ಮಾದರಿಯಲ್ಲಿ ಮಕ್ಕಳಿಗೆ ಮನೆಯಲ್ಲಿ ಒತ್ತಾಯ ಪೂರ್ವಕ್ಕಾಗಿ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಪೌಷ್ಠಿಕ ಆಹಾರ ತಿನ್ನಿಸುವಂತೆ ಪಾಲಕರಿಗೆ ಮನವರಿಕೆ ಮಾಡಿಸುವ ಕೆಲಸವಾಗಬೇಕು. ಈಗಾಗಲೇ ಗೋಡಂಬಿ ಹಾಗೂ ಖರ್ಜೂರ ನೀಡಲು ತಿಳಿಸಲಾಗಿದೆ. ಆಯಾ ಋತುಮಾನಕ್ಕೆ ದೊರೆಯುವ ಹಣ್ಣುಗಳನ್ನು ವಿತರಿಸುವ ಸೌಲಭ್ಯವಿದ್ದರೆ ಒಳ್ಳೆಯದು. ಇದರಿಂದ ಮಕ್ಕಳ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.

          ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯವಿರುವ ಪ್ರದೇಶದಲ್ಲಿ ರೇಷ್ಮೆ ಬೆಳೆಯುವಂತೆ ರೈತರನ್ನು ಉತ್ತೇಜಿಸಬೇಕು. ಹಾವೇರಿ ಜಿಲ್ಲೆಯನ್ನು ರೇಷ್ಮೆ ಬೆಳೆಯುವ ನಾಡಾಗಿ ಗುರುತಿಸುವ ನಿಟ್ಟಿನಲ್ಲಿ ಕೆಲಸಮಾಡಿ, ಜಿಲ್ಲೆಯ 10 ಸಾವಿರ ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆಯುವಂತಾಗಬೇಕು ಎಂದು ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

         ಜಿಲ್ಲೆಯಲ್ಲಿ ರಸ್ತೆಗಳ ಮೇಲೆ ರೈತರು ಬೆಳೆಗಳ ಒಕ್ಕಣೆ ಮಾಡಲಾಗುತ್ತಿದೆ. ಕಾರಣ ನರೇಗಾ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಖಾಲಿ ಇರುವ ಜಾಗದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕಣ ನಿರ್ಮಾಣಮಾಡುವ ಕೆಲಸವಾಗಬೇಕು. ಈ ಕುರಿತು ಈಗಾಗಲೇ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅನುದಾನವನ್ನು ಆಯಾ ಜನರ ವಾಸಸ್ಥಳ, ಮುಖ್ಯ ರಸ್ತೆ ಅಥವಾ ಕೂಡು ರಸ್ತೆಗಳಿಗೆ ಮಾತ್ರ ವೆಚ್ಚಮಾಡಬೇಕು. ಆದರೆ ರಾಣೇಬೆನ್ನೂರ ತಾಲೂಕಿನಲ್ಲಿ ಬೇರೆ ಕಡೆ ಮಾಡಲಾಗುತ್ತಿದೆ ಎಂದು ದೂರುಗಳು ಬಂದಿದ್ದು, ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

        ಜಿಲ್ಲಾಡಳಿತ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಹಾಗಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ಯೋಜನೆಗಳ ಮಾಹಿತಿಯನ್ನು ಕಲ್ಲಿನಲ್ಲಿ ಅಥವಾ ಸ್ಟೀಲ್ ಅಥವಾ ಕಟ್ಟಿಗೆಯಲ್ಲಿ ಕೆತ್ತಿಸಿ ಪ್ರದರ್ಶಿಸುವ ಕೆಲಸವಾಗಬೇಕು. ಜಿಲ್ಲಾಡಳಿತ ಭವನದಲ್ಲಿ ಹೆಚ್ಚಿನ ಸ್ಥಳವಕಾಶವಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

        ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಚೈತ್ರಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link